ಬೆಂಗಳೂರು: ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ನೋಡಲ್ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿಯಾಗಿರುವ ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವೈದ್ಯಕೀಯ ತ್ಯಾಜ್ಯ ಘಟಕಗಳ ನಿರ್ವಹಣೆಯ ಮೇಲ್ವಿಚಾರಣೆ ಮಾಡಿ, ಕಾಲ ಕಾಲಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಈ ನೋಡಲ್ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವೈದ್ಯಕೀಯ ತ್ಯಾಜ್ಯವು ಮಾನವರ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರದಂತೆ ವೈಜ್ಞಾನಿಕವಾಗಿ ವಿಲೇವಾರಿಯಾಗುತ್ತಿದೆ ಎನ್ನುವುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಈ ತ್ಯಾಜ್ಯಕ್ಕೆ ಸಂಬಂಧಿಸಿದಂತೆ ವಾರ್ಷಿಕ ವರದಿಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಸಕಾಲಿಕವಾಗಿ ಸಲ್ಲಿಕೆಯಾಗುವಂತೆ ನೋಡಿಕೊಳ್ಳಬೇಕು. ಬೇರ್ಪಡಿಸಿದ ವೈದ್ಯಕೀಯ ತ್ಯಾಜ್ಯವನ್ನು ಸಂಗ್ರಹಿಸಲು ಸುರಕ್ಷಿತ ಸ್ಥಳ ಇದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸೂಕ್ತ ಸ್ಥಳ ನಿರ್ಮಾಣಕ್ಕೆ ಆಸ್ಪತ್ರೆಗಳಿಗೆ ಸೂಚಿಸಬೇಕು ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.