ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಆರ್. ಪ್ರಕಾಶ್, ರಾಘವೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಸಿ. ದೇವರಾಜು, ಸಹಾಯಕ ಕಾರ್ಯದರ್ಶಿಯಾಗಿ ಆರ್. ಹನುಮಂತರಾಯಪ್ಪ, ಖಜಾಂಚಿಯಾಗಿ ಎಂ.ಎಸ್. ಉಮಾಪತಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಎರಡನೇ ಬಾರಿ ಅಧ್ಯಕ್ಷ: 2021ರ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದ ಸಿ.ಎನ್. ಬಾಲಕೃಷ್ಣ, 2022ರ ಜನವರಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋನಪ್ಪ ರೆಡ್ಡಿ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಈ ಸಮಿತಿಯ ವಿರುದ್ಧ ಕೆಂಚಪ್ಪ ಗೌಡ ಬಣವು ಅವಿಶ್ವಾಸ ಗೊತ್ತುವಳಿ ಮಂಡಿಸಿ 2023ರ ಜೂನ್ನಲ್ಲಿ ಪದಚ್ಯುತಗೊಳಿಸಲಾಗಿತ್ತು. ಬಂಡಾಯ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿದ್ದರು. ಅದೇ ವರ್ಷ ಜುಲೈಯಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ ಕೆಂಚಪ್ಪ ಗೌಡ ಬಣದ ಡಿ. ಹನುಮಂತಯ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಒಂದು ವರ್ಷದ ಬಳಿಕ ಗುರುವಾರ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸಿ.ಎನ್. ಬಾಲಕೃಷ್ಣ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.