ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ, ಸೋಮವಾರದಂದು(ಮೇ 13) ಉದ್ಯಾನದ ರಾಜ್ಯ ಕೇಂದ್ರ ಗ್ರಂಥಾಲಯದ ಭಾಗದಲ್ಲಿ ಸಿನಿಮಾ ಚಿತ್ರೀಕರಣ ಮಾಡಲು ಅವಕಾಶ ನೀಡಿರುವುದಕ್ಕೆ ಕಬ್ಬನ್ ಉದ್ಯಾನ ನಡಿಗೆದಾರರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.
‘ಕಬ್ಬನ್ ಉದ್ಯಾನದಲ್ಲಿ ಚಲನಚಿತ್ರ ಚಿತ್ರೀಕರಣ, ಛಾಯಾಗ್ರಹಣ ಮತ್ತು ವಿಡಿಯೋಗ್ರಫಿ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ, ತೋಟಗಾರಿಕೆ ಇಲಾಖೆಯು ಚಿತ್ರೀಕರಣ ಮಾಡುವುದಕ್ಕೆ ಅನುಮತಿ ನೀಡಿರುವುದು ಖಂಡನೀಯ. ಈ ಬಗ್ಗೆ ತನಿಖೆ ನಡೆಸಿ, ಅವಕಾಶ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಘವು ಆಗ್ರಹಿಸಿದೆ.
‘ಸಿನಿಮಾ ಚಿತ್ರೀಕರಣ ಮಾಡುವುದಕ್ಕೆ ಅವಕಾಶ ಕಲ್ಪಿಸುವ ಮೂಲಕ ಉದ್ಯಾನವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ದೂರಿದೆ.
‘ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ (ಕಬ್ಬನ್ ಉದ್ಯಾನ) ಪವಿತ್ರಾ, ‘ಕಬ್ಬನ್ ಉದ್ಯಾನದಲ್ಲಿ ಚಲನಚಿತ್ರ ಚಿತ್ರೀಕರಣ ಮಾಡುವುದಕ್ಕೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ರೀತಿಯ ಅನುಮತಿ ನೀಡಿಲ್ಲ. ಆದರೆ, ಉದ್ಯಾನದ ಆವರಣದಲ್ಲಿರುವ ಕೇಂದ್ರ ಗ್ರಂಥಾಲಯದಲ್ಲಿ ಚಿತ್ರಿಕರಣ ಮಾಡುವುದಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಅನುಮತಿ ನೀಡಿದೆ’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
‘ಕಬ್ಬನ್ ಉದ್ಯಾನ ಒಂದು ಸಂರಕ್ಷಿತ ಪ್ರದೇಶ. ಉದ್ಯಾನದ ಅಂದಕ್ಕೆ ಯಾವುದೇ ಧಕ್ಕೆ ಆಗಬಾರದು. ಹೀಗಾಗಿ ಕ್ಯಾಮರಾ ಬಳಕೆಯನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.