ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ

ಸಹೋದರ, ಪತ್ನಿ ಜತೆ ಚರ್ಚಿಸಿದ ನಟ ದರ್ಶನ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 16:19 IST
Last Updated 6 ಸೆಪ್ಟೆಂಬರ್ 2024, 16:19 IST
ದರ್ಶನ್
ದರ್ಶನ್   

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ಸೋಮವಾರ (ಸೆಪ್ಟೆಂಬರ್‌ 9) ಅಂತ್ಯವಾಗಲಿದೆ. ಹಾಗಾಗಿ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. 

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ ಅವರು ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್‌ ಈವರೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿರಲಿಲ್ಲ.

ದರ್ಶನ್ ತಮ್ಮ ಜಾಮೀನು ಅರ್ಜಿಯ ವಕಾಲತ್ತು ನಮೂನೆಗೆ ಸಹಿ ಮಾಡಿ ಕೊಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ADVERTISEMENT

ಆರೋಪಪಟ್ಟಿಯ ಪ್ರತಿಯನ್ನು ನ್ಯಾಯಾಲಯದಿಂದ ಪಡೆದ ಬಳಿಕ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ದರ್ಶನ್ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಆರ್ಥಿಕ ನೆರವಿಗೆ ಆರೋಪಿ ಅಕ್ಕ ಮನವಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿ ನಂದೀಶ್ ಕುಟುಂಬದವರು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರನ್ನು ಭೇಟಿ ಮಾಡಿ, ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದರು.

‘ನಮ್ಮದು ಬಡ ಕುಟುಂಬ. ನಂದೀಶ್ ದುಡಿಮೆಯೇ ಕುಟುಂಬಕ್ಕೆ ಆಧಾರವಾಗಿತ್ತು. ತಾಯಿ ಅನಾರೋಗ್ಯ ಪೀಡಿತೆ. ಚಿಕಿತ್ಸೆ ಕೊಡಿಸಲು ಆಗದ ಪರಿಸ್ಥಿತಿ ಇದೆ. ನಂದೀಶ್‌ನನ್ನು ಜಾಮೀನಿನ ಮೇಲೆ ಹೊರತರಲು ವಕೀಲರನ್ನು ನೇಮಿಸಿಕೊಳ್ಳಲು ಹಣವಿಲ್ಲ. ತಮ್ಮನನ್ನು ಜೈಲಿನಿಂದ ಬಿಡುಗಡೆ ಮಾಡಿಸಿಕೊಡಿ’ ಎಂದು ನಂದೀಶ್ ಅಕ್ಕ ನಂದಿನಿ ಅವರು ವಿಜಯಲಕ್ಷ್ಮೀ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.‌

ವಿಜಯಲಕ್ಷ್ಮೀ ಅವರ ಸೂಚನೆಯಂತೆ ‌ದರ್ಶನ್ ಆಪ್ತರು ನಂದೀಶ್ ಕುಟುಂಬದವರನ್ನು ಸಂಪರ್ಕಿಸಿ ಮಾಹಿತಿ ಪಡೆದು, ವಕೀಲರ ನೇಮಕಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.