ಬೆಂಗಳೂರು: ‘ಏಜೆನ್ಸಿ ಬದಲು ರಾಜ್ಯ ಸರ್ಕಾರದಿಂದಲೇ ನೇರವಾಗಿ ವೇತನ ಪಾವತಿ ಮಾಡಬೇಕು’ ಎಂದು ಆಗ್ರಹಿಸಿ ಬಿಸಿಎಂ ಹಾಸ್ಟೆಲ್ಗಳ ಹೊರಗುತ್ತಿಗೆ ಸಿಬ್ಬಂದಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ವಸಂತನಗರದಲ್ಲಿರುವ ದೇವರಾಜ ಅರಸು ಭವನ ಎದುರು ಸೇರಿದ್ದ ಸಿಬ್ಬಂದಿ, ತಮ್ಮ ಬೇಡಿಕೆ ಈಡೇರಿಸು ವವರೆಗೂ ಸ್ಥಳ ಬಿಟ್ಟು ಹೋಗುವುದಿಲ್ಲ ವೆಂದು ಪಟ್ಟು ಹಿಡಿದರು. ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವ ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯದಾದ್ಯಂತ ಸುಮಾರು 5,500 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಆರೂವರೆ ತಿಂಗಳಿನಿಂದ ವೇತನ ಆಗಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.
‘ವೇತನ ಬಾರದಿದ್ದರಿಂದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಜೆನ್ಸಿಯಿಂದ ಬಾಕಿ ವೇತನ ಕೊಡಿಸಬೇಕು. ಮುಂದಿನ ದಿನಗಳಲ್ಲಿ ಸರ್ಕಾರದಿಂದಲೇ ನೇರವಾಗಿ ಸಿಬ್ಬಂದಿಗೆ ವೇತನ ಪಾವತಿ ಮಾಡಬೇಕು’ ಎಂದು ಅವರು ಆಗ್ರಹಿಸಿದರು.
‘ಸಿಬ್ಬಂದಿಗೆ ಇಎಸ್ಐ, ಪಿಎಫ್ ಸೌಲಭ್ಯವಿಲ್ಲ. ಮೇಲಿನ ಅಧಿ ಕಾರಿಗಳು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ. 15 ವರ್ಷದಿಂದ 20 ವರ್ಷ ಸೇವೆ ಸಲ್ಲಿಸಿರುವವರನ್ನು ಏಕಾ ಏಕಿ ಕೆಲಸದಿಂದ ತೆಗೆಯುತ್ತಿದ್ದಾರೆ. ಹಣ ಪಡೆದು ಬೇರೆಯವರನ್ನು ಹುದ್ದೆಗೆ ನೇಮಿಸಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.
ಸಭೆ ನಡೆಸಿ ಕ್ರಮ: ಪ್ರತಿಭಟನಾಕಾರರ ಮನವಿ ಆಲಿಸಿದ ಸಚಿವ ಶಿವರಾಜ ತಂಗಡಗಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಕೆ.ಎ. ದಯಾನಂದ್, ‘ವಿಕಾಸಸೌಧದಲ್ಲಿ ಸಭೆ ನಡೆಸಲಾಗುವುದು. ಅಧಿ ಕಾರಿಗಳು ಹಾಗೂ ಸಂಘದ ಮುಖಂಡರ ಸಮ್ಮುಖದಲ್ಲಿ ಚರ್ಚಿಸಿ, ಬೇಡಿಕೆ ಈಡೇರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.