ರಾಜರಾಜೇಶ್ವರಿನಗರ: ‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾದ ಅನುದಾನ, ಸವಲತ್ತು ಪಡೆಯಲು ನಿರಂತರ ಹೋರಾಟ ನಡೆಸುತ್ತೇನೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಹೇಳಿದರು.
ವಿವಿಧೆಡೆ ಮತಯಾಚನೆ ಮಾಡಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಯುವ ಜನಾಂಗಕ್ಕೆ ಸಿಗಬೇಕಾದ ಉದ್ಯೋಗಗಳು ಗುಜರಾತ್, ಉತ್ತರ ಪ್ರದೇಶದ ಪಾಲಾಗುತ್ತಿವೆ. ನಮ್ಮ ಮಕ್ಕಳ ಭವಿಷ್ಯಕ್ಕಾಗಿ, ರಾಜ್ಯದ ಜನತೆ, ಪೋಷಕರು ದೊಡ್ಡ ಮಟ್ಟದಲ್ಲಿ ಗಟ್ಟಿಧ್ವನಿ ಎತ್ತಬೇಕು ಎಂದು ಹೇಳಿದರು.
‘ಎಂತಹ ಸಮಸ್ಯೆ ಎದುರಾದರೂ ಮೇಕೆದಾಟು ಯೋಜನೆ ಪ್ರಾರಂಭ ಮಾಡಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಿಸಿಯೇ ತೀರುತ್ತೇನೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು, ನಮ್ಮ ತೆರಿಗೆ ಹಣ ತರಲು, ಕ್ಷೇತ್ರದ ಸಮಗ್ರ ಅಭಿವೃದ್ದಿ ಮಾಡಿ ತೋರಿಸುತ್ತೇನೆ’ ಎಂದರು.
ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ, ಪಾಲಿಕೆ ಮಾಜಿ ಸದಸ್ಯರಾದ ವೇಲು ನಾಯಕ್, ಬಿ.ಆರ್.ನಂಜುಂಡಪ್ಪ, ಶ್ರೀನಿವಾಸ ಮೂರ್ತಿ(ಜಾನಿ), ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲ್ ಕೃಷ್ಣ, ಕೆಪಿಸಿಸಿ ಸದಸ್ಯ ಎಸ್.ಬೆಟ್ಟಸ್ವಾಮಿಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.