ADVERTISEMENT

ಕೆಪಿಟಿಸಿಎಲ್ ನೌಕರರ ಸಂಘಕ್ಕೆ ಚುನಾವಣೆ: ಹೈಕೋರ್ಟ್ ಅಸ್ತು

​ಪ್ರಜಾವಾಣಿ ವಾರ್ತೆ
Published 22 ಮೇ 2024, 16:25 IST
Last Updated 22 ಮೇ 2024, 16:25 IST
   

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌) ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಇದೇ 23ರಂದು ನಿಗದಿಯಾಗಿರುವ ಚುನಾವಣೆಯನ್ನು ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ.

‘ಚುನಾವಣೆ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಸೂಕ್ತವಾಗಿ ಅನುಸರಿಸುತ್ತಿಲ್ಲ’ ಎಂದು ಆಕ್ಷೇಪಿಸಿ ಆರ್‌.ಮುರಳೀಧರ ಸೇರಿದಂತೆ ಸಂಘದ 10 ಮಂದಿ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ಜಿ.ಎಸ್‌ ಕಮಲ್‌ ಅವರು ಈ ಕುರಿತಂತೆ ಆದೇಶಿಸಿದ್ದಾರೆ.

‘ಚುನಾವಣಾ ಫಲಿತಾಂಶವು ಅರ್ಜಿ ಕುರಿತಂತೆ ಹೈಕೋರ್ಟ್‌ ಹೊರಡಿಸುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ’ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.

ADVERTISEMENT

‘ಒಮ್ಮೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ನಂತರ ಆ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂದು ಕಾನೂನು ಸ್ಪಷ್ಟವಾಗಿ ಹೇಳುತ್ತದೆ. ಆದರೂ ಚುನಾವಣೆಗೆ ಸಂಬಂಧಿಸಿದ ಯಾವುದೇ ನಿಯಮಗಳು ಉಲ್ಲಂಘನೆಯಾಗುತ್ತಿವೆ ಎಂಬ ಬಗ್ಗೆ ಅರ್ಜಿದಾರರಿಗೆ ಆಕ್ಷೇಪ ಇದ್ದಲ್ಲಿ ಮತ್ತು ಚುನಾವಣೆಯ ಕಾನೂನು ಬದ್ಧತೆಯನ್ನು ಚುನಾವಣೆ ಮುಗಿದ ನಂತರವೇ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬೇಕಿರುತ್ತದೆ. ಆದ್ದರಿಂದ, ನಿಗದಿಯಂತೆ ನೌಕರರ ಸಂಘವು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಬಹುದು’ ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.