ಬೆಂಗಳೂರು: ಅರಣ್ಯ ಇಲಾಖೆಯ ವಿವಿಧ ಹುದ್ದಗಳಿಗೆ ಕನಿಷ್ಠ ವಿದ್ಯಾರ್ಹತೆ ನಿಗದಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಅರಣ್ಯ ವಿಜ್ಞಾನ ಪದವೀಧರರು ಪ್ರತಿಭಟನೆ ಹಿಂಪಡೆದಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಅರಣ್ಯ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘದ ಅಧ್ಯಕ್ಷ ಚೇತನ್ ಗೌಡ ಎಚ್.ಕೆ., ‘ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ. ಅರಣ್ಯ ವಿಜ್ಞಾನ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ನಿಗದಿಪಡಿಸಬೇಕು ಎಂದು ಆಗ್ರಹಿಸಿ, ಕಾಲೇಜು ತರಗತಿಗಳನ್ನು 18 ದಿನಗಳಿಂದ ಬಹಿಷ್ಕರಿಸಲಾಗಿತ್ತು. ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿಯೂ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸಲಾಗಿತ್ತು. ಸಚಿವರ ಸಕಾರಾತ್ಮಕ ಭರವಸೆಗಳಿಂದ ನಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟಿದ್ದೇವೆ’ ಎಂದು ಹೇಳಿದರು.
‘ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಈಶ್ವರ ಬಿ. ಖಂಡ್ರೆ ಅವರು, ವಿಜಯಭಾಸ್ಕರ್ ನೇತೃತ್ವದ ಸಮಿತಿಯ ವರದಿಯನ್ನು ಕೈಬಿಡುವುದಾಗಿ ತಿಳಿಸಿ, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ. ಅವರು ಒಂದು ವಾರದಲಿ ತಜ್ಞರ ಸಮಿತಿ ರಚಿಸುತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಅವರು ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಜೂನ್ನಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.