ADVERTISEMENT

ತೆರವಾಗದ ತ್ಯಾಜ್ಯ: ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 21:10 IST
Last Updated 11 ಜನವರಿ 2024, 21:10 IST
<div class="paragraphs"><p>ಲೋಕಾಯುಕ್ತ ಕಚೇರಿ</p></div>

ಲೋಕಾಯುಕ್ತ ಕಚೇರಿ

   

ಬೆಂಗಳೂರು: ಕೆರೆಗುಡ್ಡದಹಳ್ಳಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡದ ಚಿಕ್ಕಬಾಣಾವರ ಪುರಸಭೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳವಾರ ದಾಸರಹಳ್ಳಿ ವಲಯದಲ್ಲಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಾದ ರಾಖಿ ಸುಧಾಕರ್‌ ಅವರು, ‘ಕೆರೆಗುಡ್ಡದಹಳ್ಳಿ ಕೆರೆ ವ್ಯಾಪ್ತಿಯಲ್ಲಿ ಬಿದ್ದಿರುವ ಕಸದ ರಾಶಿಯನ್ನು ಒಂದೂವರೆ ವರ್ಷದಿಂದ ತೆರವು ಮಾಡಿಲ್ಲ. ಚಿಕ್ಕಬಾಣಾವರ ಪುರಸಭೆಯ ಪ್ರತಿನಿಧಿಗಳಿಂದ ಹಿಡಿದು ಪುರಸಭೆಯ ಮುಖ್ಯ ಅಧಿಕಾರಿಗೆ ಹಲವು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ’ ಎಂದು ದೂರಿದ್ದರು.

ADVERTISEMENT

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತರು, ‘ಮೌಖಿಕವಾಗಿ ಸ್ಥಳೀಯರು ದೂರು ನೀಡಿದ್ದು, ಚಿಕ್ಕಬಾಣಾವರ ಪುರಸಭೆ ಮುಖ್ಯ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ. ತ್ಯಾಜ್ಯ ತೆರವು ಮಾಡದೆ, ಆರೋಗ್ಯಕರ ಪರಿಸರಕ್ಕೆ ಮಾರಕವಾಗಿದ್ದಾರೆ ಎಂದು ಸ್ವಯಂ  ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ, ಪೌರಾಡಳಿತ ಇಲಾಖೆ ನಿರ್ದೇಶಕ, ಚಿಕ್ಕಬಾಣಾವರ ಪುರಸಭೆ ಮುಖ್ಯ ಅಧಿಕಾರಿ, ಪರಿಸರ ಅಧಿಕಾರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.