ಬೆಂಗಳೂರು: ‘ಮೇಕೆದಾಟು ಯೋಜನೆ ಸಾಕಾರಗೊಂಡರೆ ಕರ್ನಾಟಕಕ್ಕಿಂತ ತಮಿಳುನಾಡಿನ ಜನತೆಗೆ ಹೆಚ್ಚು ಉಪಯೋಗ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ತಮಿಳುನಾಡಿನ ಚೆನ್ನೈನಲ್ಲಿರುವ ಶ್ರೀನಿವಾಸ ಘನ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಈ ವರ್ಷ ವರುಣದೇವ ನಮ್ಮನ್ನು ಕಾಪಾಡಿದ್ದಾನೆ. ಮಳೆಯಿಂದ ತಮಿಳುನಾಡಿಗೆ ಒಳ್ಳೆಯದಾಗಿದೆ’ ಎಂದು ಹೇಳಿದರು.
‘ಘನ ತ್ಯಾಜ್ಯ ನಿರ್ವಹಣೆ ಹಾಗೂ ಕಸದಿಂದ ಅನಿಲ ಉತ್ಪಾದನೆಯ ಬಗ್ಗೆ ತಿಳಿದುಕೊಳ್ಳಲು 15 ಮಂದಿ ಅಧಿಕಾರಿಗಳೊಂದಿಗೆ ಬಂದಿದ್ದೇನೆ. ಇಲ್ಲಿನ ಉತ್ತಮ ಅಂಶಗಳನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿಕೊಳ್ಳಲಾಗುವುದು’ ಎಂದರು.
‘ನಮ್ಮಲ್ಲಿಯೂ 10 ಕಡೆ ಕಸದಿಂದ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು. ಅನೇಕ ಕಡೆ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಯಶಸ್ಸು ಕಂಡಿಲ್ಲ. ಇಲ್ಲಿ ನಗರದ ಮಧ್ಯದಲ್ಲೇ ಸಿಎನ್ಜಿ ಉತ್ಪಾದನಾ ಘಟಕವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ’ ಎಂದು ಹೇಳಿದರು.
ಚೆನ್ನೈನ ಅರ್ಬೇಸರ್ ಕಂಪನಿ ಕಚೇರಿಗೆ ಭೇಟಿ ನೀಡಿದ ಶಿವಕುಮಾರ್, ಹಸಿ ತ್ಯಾಜ್ಯವನ್ನು ಮನೆ, ಮನೆಗಳಿಂದ ಸಂಗ್ರಹಿಸಿ ವಿಲೇವಾರಿ ಮಾಡುವ ಪ್ರಕ್ರಿಯೆ ಕುರಿತು ಮಾಹಿತಿ ಪಡೆದರು.
ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.