ಬೆಂಗಳೂರು: ‘ಪ್ರಾಧಿಕಾರಗಳು ಮತ್ತು ಸರ್ಕಾರಿ ಅಧಿಕಾರಿಗಳು ಕನ್ನಡವನ್ನು ತಮ್ಮ ದಿನನಿತ್ಯದ ಕೆಲಸದಲ್ಲಿ ಸಮೃದ್ಧಗೊಳಿಸಿ ಪ್ರೋತ್ಸಾಹಿಸಬೇಕಾದ ಅಗತ್ಯವಿದೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
‘ಲೋಕಾಯುಕ್ತ ಸಂಸ್ಥೆಯಲ್ಲಿ ದಿನನಿತ್ಯದ ಎಲ್ಲ ಪ್ರಕ್ರಿಯೆಗಳನ್ನು ಕನ್ನಡ ಭಾಷೆಯಲ್ಲೇ ನಡೆಸುವಂತೆ ನಿರ್ದೇಶಿಸಬೇಕು’ ಎಂದು ಕೋರಿ ಬೀದರ್ನ ಸಾಮಾಜಿಕ ಕಾರ್ಯಕರ್ತ ಗುರುನಾಥ್ ವಡ್ಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅಂತೆಯೇ, ಅರ್ಜಿದಾರರು ಕೋರಿಕೆಯನ್ನು ಪುರಸ್ಕರಿಸಲು ನಿರಾಕರಿಸಿತು.
‘ರಾಜ್ಯ ಸರ್ಕಾರ ಮತ್ತು ಅಧೀನ ಪ್ರಾಧಿಕಾರಗಳು ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ತೆಗೆದುಕೊಳ್ಳಬೇಕು. ಸರ್ಕಾರ ಮತ್ತು ಅಧಿಕಾರಿಗಳು ಸಾಧ್ಯವಾದಷ್ಟು ಕನ್ನಡಕ್ಕೇ ಅಗ್ರ ತಾಂಬೂಲ ನೀಡಬೇಕು. ಆಗ ಮಾತ್ರ ಕರ್ನಾಟಕದ ಭಾಷಾ ಸಂಸ್ಕೃತಿ ಉಳಿಯುತ್ತದೆ. ಸರ್ಕಾರದಲ್ಲಿ ಏಕಭಾಷೆ ಬಳಕೆ ಮಾಡಬೇಕೆಂಬ ಸಾರ್ವತ್ರಿಕ ಸೂತ್ರವಿಲ್ಲ. ಆದಾಗ್ಯೂ, ಮೂಲಭೂತವಾಗಿ ಸರ್ಕಾರಿ ವ್ಯವಹಾರಗಳು ಯಾವ ಬಾಷೆ ಬಳಸಬೇಕೆಂಬುದು ನೀತಿ ಮತ್ತು ಅನುಕೂಲತೆಯ ವಿಷಯವಾಗಿದೆ’ ಎಂದು ನ್ಯಾಯಪೀಠ ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.