ADVERTISEMENT

ಹೊರಮಾವು: ಮೂಲಸೌಕರ್ಯ ಒದಗಿಸಲು ಆಗ್ರಹ

ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 0:05 IST
Last Updated 11 ಜುಲೈ 2024, 0:05 IST
ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹೊರಮಾವು ಅಗರ ಸರ್ಕಾರಿ ನ್ಯಾಯಬೆಲೆ ಅಂಗಡಿ ಮುಂಭಾಗದಿಂದ ಹೊರಮಾವು ಬಿಬಿಎಂಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹೊರಮಾವು ಅಗರ ಸರ್ಕಾರಿ ನ್ಯಾಯಬೆಲೆ ಅಂಗಡಿ ಮುಂಭಾಗದಿಂದ ಹೊರಮಾವು ಬಿಬಿಎಂಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.   

ಕೆ.ಆರ್.ಪುರ: ಕುಡಿಯುವ ನೀರು, ರಸ್ತೆ, ಚರಂಡಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹೊರಮಾವು ಅಗರ ಸರ್ಕಾರಿ ನ್ಯಾಯಬೆಲೆ ಅಂಗಡಿ ಮುಂಭಾಗದಿಂದ ಬಿಬಿಎಂಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿರುವ ದಲಿತ ಕಾಲೊನಿಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದೆ. ಇದರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಅಪಾರ್ಟ್‌ಮೆಂಟ್ ಮತ್ತು ಬಡಾವಣೆಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅದೇ ಗ್ರಾಮಗಳಲ್ಲಿ ವಾಸಿಸುವ ದಲಿತ ಕಾಲೊನಿಗಳಿಗೆ ನೀರು ಬಿಡುತ್ತಿಲ್ಲ‘ ಎಂದು ದೂರಿದರು.

ADVERTISEMENT

‘ಹೊರಮಾವು ಅಗರ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು. ಹೊರಮಾವು ಅಗರ ನಾಗರಕಟ್ಟೆ ಬಳಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಮತ್ತು ಬೀದಿ ದೀಪ ಅಳವಡಿಸಬೇಕು. ಬಿಬಿಎಂಪಿ ವತಿಯಿಂದ ಮನೆ ನಿರ್ಮಿಸಿ ಕೊಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ಪೂರ್ವ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್, ಡಾ.ಬಿ.ಆರ್.ಅಂಬೇಡ್ಕರ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಜ್ಯೋತಿನಗರ ಮುನಿಕೃಷ್ಣ, ಸಾಮ್ರಾಟ್ ಶೇಖರ್, ನಾರಾಯಣಸ್ವಾಮಿ, ಲಕ್ಷ್ಮೀನಾರಾಯಣ, ಶ್ವೇತಾ, ಶ್ರೀನಿವಾಸ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.