ADVERTISEMENT

₹40 ಕೋಟಿ ಮೌಲ್ಯದ ಡ್ರಗ್ಸ್ ನಾಶ: ಗೃಹ ಸಚಿವ ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 14:38 IST
Last Updated 26 ಜೂನ್ 2024, 14:38 IST
ಬೆಂಗಳೂರಿನಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. 
ಬೆಂಗಳೂರಿನಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.    

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ ಜಪ್ತಿ ಮಾಡಿಕೊಂಡಿದ್ದ ₹40 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ನಾಶ ಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ರಾಜ್ಯ ಪೊಲೀಸ್ ಇಲಾಖೆ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಯುದ್ಧವನ್ನೇ ಸಾರಿದೆ ಎಂದು ಹೇಳಿದರು.

ADVERTISEMENT

ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ ಎಂದು ಹೇಳಿದರು.

ದೇಶದಲ್ಲಿ 5 ಕೋಟಿ ಜನರು ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಹೇಳಿದರು.

ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17ರಿಂದ 20 ವರ್ಷದ ಒಳಗಿನವರೇ ಭಾಗಿ ಆಗುತ್ತಿರುವುದು ಪೊಲೀಸ್‌ ತನಿಖೆಯಿಂದ ಗೊತ್ತಾಗುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ತಿಳಿಯುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಕಮಿಷನರ್‌ ಬಿ.ದಯಾನಂದ, ಸಿಐಡಿ ವಿಭಾಗದ ಡಿಜಿಪಿ ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೋಹಂತಿ, ಆದರ್ಶ ಡೆವಲೆಪರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.