ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2024ನೇ ಸಾಲಿನ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಯ್ಕೆಯಾಗಿದೆ.
ಪರಿಷತ್ತಿನ ಕಾರ್ಯದರ್ಶಿಗಳಾದ ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ ಮತ್ತು ಸಂಶೋಧಕ ತಲಕಾಡು ಚಿಕ್ಕರಂಗೇಗೌಡ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹51 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.
ಕೈಗಾರಿಕೆ, ಶಿಕ್ಷಣ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗದ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ವೈದ್ಯಕೀಯದಂತಹ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆಗಳನ್ನು ನೀಡಿದ ವ್ಯಕ್ತಿ ಅಥವಾ ಸಂಸ್ಥೆಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಇದೇ ಮೊದಲ ಬಾರಿ ಸಂಸ್ಥೆಗೆ ಈ ಪುರಸ್ಕಾರವನ್ನು ನೀಡಲಾಗುತ್ತಿದೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯನ್ನು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರು 1916ರ ಮೇ 8ರಂದು ಸ್ಥಾಪಿಸಿದರು. ಕೈಗಾರಿಕೆಯ ವಿಷಯದಲ್ಲಿ ಮಾರ್ಗದರ್ಶಕ ಎನಿಸಿಕೊಂಡಿರುವ ಸಂಸ್ಥೆಯು, ರಾಜ್ಯ ಮತ್ತು ಕೇಂದ್ರ ಸರ್ಕಾರ ಹಾಗೂ ವಿವಿಧ ಕೈಗಾರಿಕಾ ಸಂಸ್ಥೆಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.