ಬೆಂಗಳೂರು: ‘ಸ್ವಾತಂತ್ರ್ಯ ಬಂದಾಗ ರಾಜಾಡಳಿತ ಕೊನೆಗೊಂಡಿತು. ಜನರೇ ಪ್ರಜಾಪ್ರಭುತ್ವ ಒಪ್ಪಿಕೊಂಡರು. ಜನಾಡಳಿತಕ್ಕೆ ಮೈಸೂರು ಸಂಸ್ಥಾನದ ಸಹಕಾರ ಇರಲಿದೆ’ ಎಂದು ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘವು ನೇಪಾಳದ ಪಶುಪತಿನಾಥ ದೇವಾಲಯ ಸನ್ನಿಧಿಯಲ್ಲಿರುವ ಆನಂದ ಪಶುಪತಿ ದೇವಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಾದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಪ್ರದೇಶವನ್ನು ಸೇರಿಸಲು ಬ್ರಿಟಿಷರು ಒಪ್ಪಲಿಲ್ಲ. ಸ್ವಾತಂತ್ರ್ಯಾನಂತರ ಏಕೀಕರಣದ ಹೋರಾಟದಿಂದ ಒಂದಾಯಿತು ಎಂದು ನೆನಪು ಮಾಡಿಕೊಂಡರು.
ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗೀಲ್, ‘ನೇಪಾಳದಲ್ಲಿ ಅಂತರರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಆಯೋಜಿಸುತ್ತಿರುವುದು ಸಾಹಸದ ಕೆಲಸ’ ಎಂದು ಶ್ಲಾಘಿಸಿದರು.
ಬಿಬಿಎಂಪಿ ಉಪ ಆಯುಕ್ತ ಮಂಜುನಾಥ್ ಸ್ವಾಮಿ ಮಾತನಾಡಿ, ‘ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಆಡಳಿತ ವ್ಯವಹಾರ ಸಂಪೂರ್ಣ ಕನ್ನಡ ಭಾಷೆಯಲ್ಲಿ ನಡೆಯುತ್ತಿದೆ. ಕನ್ನಡ ಭಾಷೆಯನ್ನು ಎಲ್ಲರೂ ಬಳಸಬೇಕು‘ ಎಂದು ಮನವಿ ಮಾಡಿದರು.
ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಅಧ್ಯಕ್ಷತೆ ವಹಿಸಿದ್ದರು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಶಿಖಾಕುಮಾರಿ ಒಡೆಯರ್, ಬಿಬಿಎಂಪಿ ಜಂಟಿ ಆಯುಕ್ತೆ ಲಕ್ಷ್ಮಿದೇವಿ, ಗಾಯಕಿ ಅನುರಾಧ ಭಟ್, ವಕೀಲರಾದ ವಿ. ಶ್ರೀನಿವಾಸ್, ನೌಕರರ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.