ADVERTISEMENT

ಲೋಕಸಭಾ ಚುನಾವಣೆ: ರಂಗೋಲಿ ಬಿಡಿಸಿ ಮತದಾನದ ಜಾಗೃತಿ 

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 16:18 IST
Last Updated 4 ಏಪ್ರಿಲ್ 2024, 16:18 IST
ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸಿಬ್ಬಂದಿ ಬಿಡಿಸಿದ್ದ ರಂಗೋಲಿಗಳನ್ನು ಅಧಿಕಾರಿಗಳು ವೀಕ್ಷಿಸಿದರು.
ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸಿಬ್ಬಂದಿ ಬಿಡಿಸಿದ್ದ ರಂಗೋಲಿಗಳನ್ನು ಅಧಿಕಾರಿಗಳು ವೀಕ್ಷಿಸಿದರು.   

ಯಲಹಂಕ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಜಿಲ್ಲಾ ಮತ್ತು ಯಲಹಂಕ ಸ್ವೀಪ್‌ ಸಮಿತಿಗಳ ಆಶ್ರಯದಲ್ಲಿ ಮಿನಿವಿಧಾನಸೌಧದ ಎದುರು ರಂಗೋಲಿಗಳನ್ನು ಬಿಡಿಸುವ ಮೂಲಕ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು.

ಬೆಂಗಳೂರು ಉತ್ತರ ಮತ್ತು ಯಲಹಂಕ ತಾಲ್ಲೂಕು ಪಂಚಾಯಿತಿ ಸೇರಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಹಾಗೂ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ, ಆಕರ್ಷಕ ರಂಗೋಲಿಗಳನ್ನು ಬಿಡಿಸುವ ಮೂಲಕ ಮತದಾನದ ಮಹತ್ವ ಸಾರಿದರು. ಜೊತೆಗೆ, ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವ ಕುರಿತು ಅರಿವು ಮೂಡಿಸಿದರು.

‘ಮತದಾನ ನಮ್ಮ ಹಕ್ಕು’, ‘ಓಟ್‌ ಫಾರ್‌ ಬೆಟರ್‌ ಇಂಡಿಯಾ’, ‘ದೇಶದ ಉಜ್ವಲ ಭವಿಷ್ಯಕ್ಕಾಗಿ ಮತಚಲಾಯಿಸಿ’ ಎಂಬ ಘೋಷವಾಕ್ಯಗಳನ್ನು ಬರೆಯುವ ಮೂಲಕ ಜನರ ಗಮನ ಸೆಳೆದರು.

ADVERTISEMENT

ಮತದಾನ ಜಾಗೃತಿ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಗಳ ಸಿಬ್ಬಂದಿಗೆ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಪ್ರಮೋದ್‌ ಪಾಟೀಲ್‌ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಿದರು.

ತಹಶೀಲ್ದಾರ್‌ ಅನಿಲ್‌ಕುಮಾರ್‌ ಅರೋಲಿಕರ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಿ.ಒ.ರಮೇಶ್‌, ಅಪೂರ್ವ ಕುಲಕರ್ಣಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಟಿ.ಹರೀಶ್‌, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಅಮರಯ್ಯ, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ಎನ್‌.ನವೀನ್‌ ಬಾಬು, ತಾಲ್ಲೂಕು ಎಂ.ಐ.ಎಸ್‌ ಸಂಯೋಜಕ ಮೊಹಮದ್‌ ರಫಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.