ADVERTISEMENT

ಬೆಂಗಳೂರು | ಐಟಿಸಿ ಕಾರ್ಖಾನೆ ಉದ್ಯೋಗಿ ಕೊಲೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:49 IST
Last Updated 4 ಜುಲೈ 2024, 15:49 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಐಟಿಸಿ ಕಾರ್ಖಾನೆ ಉದ್ಯೋಗಿ ಅಜಿತ್‌ (35) ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

‘ಬುಧವಾರ ಕೊಲೆ ನಡೆದಿತ್ತು. ಈ ಬಗ್ಗೆ ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕಿರಣ್‌ ಮತ್ತು ರಾಹುಲ್‌ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

‘ಅಜಿತ್‌ ಅವರು ಐಟಿಸಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿ ಕಿರಣ್‌ ಮತ್ತು ಸ್ನೇಹಿತರು ಸೇರಿ ಈ ಹಿಂದೆಯೇ ಅಜಿತ್‌ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ರಾಮಮೂರ್ತಿನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 15 ದಿನಗಳ ಹಿಂದೆಯೇ ಬಾಣಸವಾಡಿಗೆ ಬಂದಿದ್ದ ಕಿರಣ್‌ನನ್ನು ಅಜಿತ್‌ ಮತ್ತು ಅವನ ಸ್ನೇಹಿತರು ಗುರಾಯಿಸಿದ್ದರು. ಇದರಿಂದ ಕೋಪಗೊಂಡಿದ್ದ ಕಿರಣ್‌ ತನ್ನ ಸಹಚರರೊಂದಿಗೆ ಸಂಚು ರೂಪಿಸಿ ಅಜಿತ್‌ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.