ಬೆಂಗಳೂರು: ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ ಸಮಿತಿ, ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಕಾಲೇಜಿಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ರ್ಯಾಲಿಗೆ ಗಣ್ಯರು ಚಾಲನೆ ನೀಡಿದರು.
ವಿಧಾನಸೌಧದ ಮುಂಭಾಗದಿಂದ ಆರಂಭವಾದ ರ್ಯಾಲಿಯು, ಮಿಲ್ಲರ್ಸ್ ರಸ್ತೆಯ ಮೂಲಕ ಸಾಗಿ ಸೇಂಟ್ ಆನ್ಸ್ ಶಾಲೆಯ ಎದುರು ಮುಕ್ತಾಯಗೊಂಡಿತು. ‘ನಮ್ಮ ನರ್ಸ್ಗಳು; ನಮ್ಮ ಭವಿಷ್ಯ’ ಎಂಬ ಭಿತ್ತಿಪತ್ರ ಹಿಡಿದು ನರ್ಸಿಂಗ್ ವಿದ್ಯಾರ್ಥಿಗಳು ಸಾಗಿದರು. ಇದೇ ವೇಳೆ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು. ಶುಶ್ರೂಷಕರ ಸೇವೆ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ‘ಮುಂದಿನ ವರ್ಷ ರ್ಯಾಲಿಯನ್ನು ಮತ್ತಷ್ಟು ಬೃಹತ್ ಪ್ರಮಾಣದಲ್ಲಿ ಆಯೋಜಿಸಬೇಕು’ ಎಂದು ಕರೆ ನೀಡಿದರು.
‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಪ್ರಾಯೋಗಿಕ ಜ್ಞಾನ ಸಿಗಬೇಕು. ಕೋವಿಡ್ ಸಂದರ್ಭದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಶುಶ್ರೂಷಕರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ್ದರು. ಅವರ ಸೇವೆ ಸ್ಮರಣೀಯ’ ಎಂದು ಹೇಳಿದರು.
‘ವಿದೇಶಗಳಲ್ಲೂ ಭಾರತೀಯ ನರ್ಸ್ಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ವಿದೇಶದಲ್ಲಿ ಭಾರತೀಯ ಶಶ್ರೂಷಕರಿಗೆ ಬೇಡಿಕೆಯಿದೆ’ ಎಂದು ಹೇಳಿದರು. ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.