ಬೆಂಗಳೂರು: ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಲಕ್ಷ್ಮಿ ಲೇಔಟ್ನ ಕುರುಬರಹಳ್ಳಿ ನಿವಾಸಿ ಅಪ್ಪು(34) ಕೊಲೆಯಾದ ವ್ಯಕ್ತಿ.
ಕೃತ್ಯ ಎಸಗಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಠಾಣೆ ವ್ಯಾಪ್ತಿಯ ಜೀವನಹಳ್ಳಿ ರೈಲ್ವೆ ಟ್ರ್ಯಾಕ್ ಸಮೀಪ ಶನಿವಾರ ರಾತ್ರಿ ಆರೋಪಿಗಳು ಕೃತ್ಯ ಎಸಗಿ ಪರಾರಿ ಆಗಿದ್ದಾರೆ ಎಂದು ಪೊಲೀಸರು ಹೇಳಿದರು.
‘ಕೊಲೆಯಾದ ಅಪ್ಪು ಈ ಹಿಂದೆ ಕೆಲವು ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಜೀವನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಅಪ್ಪು ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ’ ಎಂದು ಪೊಲೀಸರು ಹೇಳಿದರು.
ಕೃತ್ಯದಲ್ಲಿ ಎಂಟು ಮಂದಿ ಭಾಗಿ
ಕೃತ್ಯದಲ್ಲಿ ಎಂಟು ಮಂದಿ ಭಾಗಿಯಾಗಿರುವ ಮಾಹಿತಿ ಸಿಕ್ಕಿದೆ. ಎರಡು ಗುಂಪುಗಳ ನಡುವೆ ಹಳೇ ದ್ವೇಷವಿತ್ತು. ಅಪ್ಪು ಅವರನ್ನು ಶನಿವಾರ ರಾತ್ರಿ ಸಂಧಾನಕ್ಕೆ ಕರೆಸಿಕೊಂಡು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಅಕ್ಕಪಕ್ಕದ ಸ್ಥಳದಲ್ಲಿನ ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಪರಿಶೀಲಿಸಲಾಗಿದೆ. ಕೃತ್ಯ ಎಸಗಿರುವ ಆರೋಪಿಗಳ ಮಾಹಿತಿ ಸಿಕ್ಕಿದೆ. ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೃತ್ಯ ನಡೆದ ಸ್ಥಳವು ರೈಲ್ವೆ ಪೊಲೀಸರ ವ್ಯಾಪ್ತಿಗೆ ಬಂದರೂ ತಾವೇ ತನಿಖೆ ನಡೆಸುತ್ತಿರುವುದಾಗಿ ಪುಲಕೇಶಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಅಪ್ಪು ವಿರುದ್ಧ ಈ ಹಿಂದೆ ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.