ADVERTISEMENT

ಹೂಡಿಕೆ ಆಕರ್ಷಣೆಗೆ ಪ್ರಧಾನಿ ಅಡ್ಡಗಾಲು: ಪ್ರಿಯಾಂಕ್‌ ಖರ್ಗೆ ಆರೋಪ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 15:44 IST
Last Updated 25 ಜೂನ್ 2024, 15:44 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ರಾಜ್ಯಕ್ಕೆ ವಿದೇಶಿ ಹೂಡಿಕೆ ಆಕರ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಉನ್ನತಮಟ್ಟದ ನಿಯೋಗವು ಹೂಡಿಕೆ ಆಕರ್ಷಣೆಗಾಗಿ ಅಮೆರಿಕ ಮತ್ತು ಬ್ರಿಟನ್‌ ಪ್ರವಾಸ ಕೈಗೊಂಡಿದ್ದ ಕುರಿತು ಮಾಹಿತಿ ನೀಡಲು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಅವರು, ‘ನಾವು ಕರೆದುಕೊಂಡು ಬರುವ ಹೂಡಿಕೆದಾರರನ್ನು ಸಂಪರ್ಕಿಸಿ ಗುಜರಾತ್‌ ಮತ್ತು ಉತ್ತರ ಪ್ರದೇಶದಲ್ಲಿ ಹೂಡಿಕೆ ಮಾಡುವಂತೆ ಒತ್ತಡ ಹೇರಿ, ಅಲ್ಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ’ ಎಂದು ಆರೋಪಿಸಿದರು.

‘ನಾವು ವಿದೇಶ ಸುತ್ತಿ ಹೂಡಿಕೆದಾರರನ್ನು ಕರೆದುಕೊಂಡು ಬರುತ್ತೇವೆ. ಅಷ್ಟರೊಳಗೆ ಪ್ರಧಾನಿ ಮತ್ತು ಅವರ ಸಚಿವಾಲಯದ ಅಧಿಕಾರಿಗಳು ಹೂಡಿಕೆದಾರರನ್ನು ಸಂಪರ್ಕಿಸಿ ಗುಜರಾತ್ ಅಥವಾ ಉತ್ತರ ಪ್ರದೇಶಕ್ಕೆ ಹೋಗುವಂತೆ ಒತ್ತಡ ಹೇರುತ್ತಾರೆ. ತೆಲಂಗಾಣಕ್ಕೆ ಬಂದ ಹೂಡಿಕೆದಾರರಿಗೂ ಒತ್ತಡ ಹೇರಿರುವ ಉದಾಹರಣೆಗಳಿವೆ. ಮುಂದೆ ಎಲ್ಲವನ್ನೂ ಬಹಿರಂಗಪಡಿಸುತ್ತೇವೆ’ ಎಂದರು.

ADVERTISEMENT

ಒಂದು ಕಂಪನಿ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿ ಮಾತುಕತೆಗೆ ಬಂದಿತ್ತು. ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಆ ಕಂಪನಿ ಹೋಯಿತು. ಅಲ್ಲಿಂದ ಗುಜರಾತ್‌ನಲ್ಲಿ ಹೋಗಿ ಹೂಡಿಕೆ ಮಾಡಿತು. ಕರ್ನಾಟಕದಲ್ಲಿ ಹೂಡಿಕೆಗೆ ಬಂದಿದ್ದ ಮತ್ತೊಂದು ಕಂಪನಿಯನ್ನು ಒತ್ತಡ ಹೇರಿ ಗುಜರಾತ್‌ಗೆ ಕರೆದೊಯ್ಯಲಾಯಿತು ಎಂದು ಹೇಳಿದರು.

ಸಮಾನ ಉತ್ತೇಜನಕ್ಕೆ ಆಗ್ರಹ:

ಗುಜರಾತ್‌ನಲ್ಲಿ ಹೂಡಿಕೆ ಮಾಡುವವರಿಗೆ ನೀಡುವಂತಹ ಉತ್ತೇಜನಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವವರಿಗೂ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಮಾಡಿ ಒತ್ತಾಯ ಮಾಡಲಾಗುವುದು ಎಂದು ಪ್ರಿಯಾಂಕ್‌ ತಿಳಿಸಿದರು.

‘ಮುಂದಿನ ವಾರ ದೆಹಲಿಗೆ ತೆರಳಿ ನಿರ್ಮಲಾ ಅವರನ್ನು ಭೇಟಿ ಮಾಡುತ್ತೇನೆ. ಗುಜರಾತ್‌ನಲ್ಲಿ ಹೂಡಿಕೆ ಮಾಡುವವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನೂ ಕರ್ನಾಟಕದಲ್ಲಿ ಹೂಡಿಕೆ ಮಾಡುವವರಿಗೆ ನೀಡುವಂತೆ ಬೇಡಿಕೆ ಸಲ್ಲಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.