ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರು ಆರೋಪಿಗಳನ್ನು ಜೆ.ಪಿ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಬಂಧಿತರು. ಮೊಹಾಲಿಕಾ ಪಬ್ ವ್ಯವಸ್ಥಾಪಕ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಜೆ.ಪಿ.ನಗರ 2ನೇ ಹಂತದಲ್ಲಿರುವ ಮೊಹಾಲಿಕಾ ಪಬ್ನಲ್ಲಿ ಭಾರತ– ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ–20 ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಆರೋಪಿಗಳು ಶುಕ್ರವಾರ ರಾತ್ರಿ ಪಬ್ಗೆ ಹೋಗಿದ್ದರು. ಪಂದ್ಯ ನಡೆಯುವ ಸಂದರ್ಭದಲ್ಲಿ ಪಬ್ನಲ್ಲಿ ಕೂಗಾಡಿದ್ದ ಆರೋಪಿಗಳು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.’
‘ಆರೋಪಿಗಳ ವರ್ತನೆಯನ್ನು ಪ್ರಶ್ನಿಸಿದ್ದ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ನಂತರ, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ವ್ಯವಸ್ಥಾಪಕ ದೂರು ನೀಡುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಅವರಿಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.