ಬೆಂಗಳೂರು: ವೇತನ ಪರಿಷ್ಕರಣೆ, 38 ತಿಂಗಳ ವೇತನ ಬಾಕಿ ಪಾವತಿ, ಶಕ್ತಿಯೋಜನೆಯ ಪೂರ್ಣ ಹಣ ಬಿಡುಗಡೆ ಮುಂತಾದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಫೆ.22ರಂದು ಉಪವಾಸ ಸತ್ಯಾಗ್ರಹ ನಡೆಸಲು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
ನಗರದಲ್ಲಿ ಬುಧವಾರ ನಡೆದ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಸಮಾವೇಶದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ರಾಜ್ಯದ ಎಲ್ಲ ವಿಭಾಗೀಯ ಕಚೇರಿಗಳಲ್ಲಿ, ಹುಬ್ಬಳ್ಳಿ ಮತ್ತು ಕಲಬುರಗಿಯ ಕೇಂದ್ರ ಕಚೇರಿಗಳ ಮುಂದೆ ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸತ್ಯಾಗ್ರಹ ನಡೆಸಲು ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ (ಎಐಟಿಯುಸಿ), ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು), ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಸಂಘ, ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಈ ಸಭೆಯಲ್ಲಿ ತೀರ್ಮಾನ ಕೈಗೊಂಡವು.
ಐದು ಸಂಘಟನೆಗಳ ಪ್ರತಿನಿಧಿಗಳಾದ ಜಿ.ಟಿ. ರಂಗೇಗೌಡ, ಎಚ್.ಡಿ. ರೇವಪ್ಪ, ಎನ್.ಆರ್. ದೇವರಾಜ ಅರಸ್, ರವಿಪ್ರಕಾಶ್, ಸೋಮಣ್ಣ, ಎಚ್.ಎಸ್. ಮಂಜುನಾಥ್, ಎಚ್.ವಿ. ಅನಂತಸುಬ್ಬರಾವ್, ವಿಜಯ ಭಾಸ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.