ಬೆಂಗಳೂರು: ‘ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ವಕೀಲ ವಿ.ಆರ್.ರಘುನಾಥನ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಮಧ್ಯಂತರ ಆದೇಶ ನೀಡಲು ನಿರಾಕರಿಸಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲೇನಿದೆ?: ‘ಕೆಲವು ತಿಂಗಳುಗಳಿಂದ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಒಂದಷ್ಟು ಹುದ್ದೆಗಳು ಭರ್ತಿಯಾಗದೇ ಖಾಲಿ ಉಳಿದಿವೆ. ಇದರಿಂದ ಗ್ರಾಹಕರಿಗೆ ತ್ವರಿತವಾಗಿ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಪ್ರಕರಣಗಳು ಹೆಚ್ಚುತ್ತಿದ್ದರೆ ಮತ್ತೊಂದೆಡೆ ಅಧ್ಯಕ್ಷರು ಮತ್ತು ಸದಸ್ಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಕರ್ನಾಟಕ ರಾಜ್ಯ ಗ್ರಾಹಕರ ಪರಿಹಾರ ಆಯೋಗದ ಅಧ್ಯಕ್ಷರ ಅವಧಿ ಮೇ 17ಕ್ಕೇ ಮುಕ್ತಾಯಗೊಂಡಿದೆ. ಇದುವರೆಗೂ ಆ ಹುದ್ದೆಗೆ ಹೊಸ ಅಭ್ಯರ್ಥಿಯ ನೇಮಕ ಆಗಿಲ್ಲ. ಆದ್ದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.