ADVERTISEMENT

ನೀರಿನ ಸಮಸ್ಯೆ: ನೀರು ಸರಬರಾಜು ಮಂಡಳಿ ಅಧಿಕಾರಿಗಳ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2024, 19:10 IST
Last Updated 8 ಮಾರ್ಚ್ 2024, 19:10 IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಬಳಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ಗೆ  ಹಾನಿಯಾಗಿದ್ದು, ಬಿಡಬ್ಲ್ಯುಎಸ್‌ಎಸ್‌ಬಿ ಸಿಬ್ಬಂದಿ ದುರಸ್ತಿಗೊಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಬಳಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ಗೆ  ಹಾನಿಯಾಗಿದ್ದು, ಬಿಡಬ್ಲ್ಯುಎಸ್‌ಎಸ್‌ಬಿ ಸಿಬ್ಬಂದಿ ದುರಸ್ತಿಗೊಳಿಸಿದರು.   

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೊಹಳ್ಳಿ ವಾರ್ಡ್ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಬೆಂಗಳೂರು ‌ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸರಿಪಡಿಸಿದೆ.

ಕೆಂಪೇಗೌಡ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಬಂದು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡರು. ಬಳಿಕ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಸಮಸ್ಯೆ ಪರಿಶೀಲಿಸಿ, ಕ್ರಮ ಕೈಗೊಂಡರು.

ಅಂಬೇಡ್ಕರ್ ನಗರಕ್ಕೆ ನೀರು: ನಾಯಂಡಹಳ್ಳಿಯ ಪಂತರ್‌ಪಾಳ್ಯದ ಅಂಬೇಡ್ಕರ್ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉದ್ಭವವಾಗಿರುವುದನ್ನು ಅರಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರೊಂದಿಗೆ ಚರ್ಚಿಸಿದರು. ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದರು.

ADVERTISEMENT

ನೀರಿನ ಸಮಸ್ಯೆ ನಿವಾರಣೆಯಾಗುವವರೆಗೆ ಬಡಾವಣೆಗೆ ನಿತ್ಯ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು.

ಹೇರೊಹಳ್ಳಿ, ಅಂಬೇಡ್ಕರ್‌ ನಗರ ಸಹಿತ ವಿವಿಧೆಡೆ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ‘ಪ್ರಜಾವಾಣಿ’ ‘ಜಲ ಜಂಜಾಟ’ ವಿಶೇಷ ವರದಿ ಮೂಲಕ ಗಮನ ಸೆಳೆದಿತ್ತು.

ಪೈಪ್‌ಗೆ ಹಾನಿ–ದುರಸ್ತಿ: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಬಳಿ ಕುಡಿಯುವ ನೀರು ಸರಬರಾಜು ಮಾಡುವ ಒಂದು ಸಾವಿರ ಎಂಎಂ ವ್ಯಾಸದ ಪೈಪ್‌ಲೈನ್‌ಗೆ ಗುರುವಾರ ಹಾನಿಯಾಗಿತ್ತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಕಾರ್ಮಿಕರೊಡಗೂಡಿ ನಿರಂತರ ನಾಲ್ಕು ತಾಸು ಕೆಲಸ ಮಾಡಿ ದುರಸ್ತಿಗೊಳಿಸಿದರು. ರಾಜರಾಜೇಶ್ವರಿ ನಗರಕ್ಕೆ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ನೀರು ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.