ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿ ಶೀಟರ್ ಅರುಣ್ ಕೊಲೆ ಸಂಬಂಧ ಆರು ಜನರಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಒಬ್ಬ ಅಪರಾಧಿಯನ್ನು ಖುಲಾಸೆಗೊಳಿಸಿದೆ.
ಈ ಕುರಿತ ಕ್ರಿಮಿನಲ್ ಮೇಲ್ಮನವಿ ಮೇಲಿನ ಆದೇಶವನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶ್ ಕುಮಾರ್, ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.
ಏಳನೇ ಆರೋಪಿ ಬಂಡೆಪಾಳ್ಯದ ಅಂಗಡಿ ರಾಜಣ್ಣ ಪರ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು, ‘ರಾಜಣ್ಣ ವಿರುದ್ಧ ಕೊಲೆಗೆ ಸಂಚು ಆರೋಪಕ್ಕೆ ಪೂರಕ ಸಾಕ್ಷ್ಯಗಳು ಲಭ್ಯವಿಲ್ಲ. ಅವರನ್ನು ಖುಲಾಸೆ
ಗೊಳಿಸಬೇಕು’ ಎಂದು ಮಾಡಿದ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿ, ಶಿಕ್ಷೆಯಿಂದ ಖುಲಾಸೆಗೊಳಿಸಿತು.
ಅರುಣ್ ಕೊಲೆ 2017ರ ಫೆಬ್ರುವರಿ 5ರಂದು ನಡೆದಿತ್ತು. ಈ ಸಂಬಂಧ ಏಳು ಜನರನ್ನು ಬಂಧಿಸಿದ್ದ ಪೊಲೀಸರು ಐಪಿಸಿ ಕಲಂ 143, 147, 148, 120(ಬಿ), 302 ಮತ್ತು 149 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮದ ಕಲಂ 3(2),(5)ರ ಅಡಿ ಪ್ರಕರಣ ದಾಖಲಿಸಿದ್ದು, ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.