ಬೆಂಗಳೂರು: ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗೆ ವಿಶ್ವವೇ ಬೆರಗಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
‘ರಾಮನ್ ರೀಸರ್ಚ್ ಇನ್ಸ್ಟಿಟ್ಯೂಟ್‘ನ ಅಮೃತ ಮಹೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.
ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನದ ಬೆಳೆವಣಿಗೆ ವೇಗ ಪಡೆದಿದೆ. ಚಂದ್ರಯಾನದಂತಹ ಕಾರ್ಯಕ್ರಮಗಳು ಯಶಸ್ವಿಯಾಗಿವೆ. 2047ರ ಭಾರತ ವಿಶ್ವದ ಅತ್ಯಂತ ಬಲಿಷ್ಠ ದೇಶವಾಗಲಿದೆ ಎಂದರು.
‘1948ರಲ್ಲಿ ಸ್ಥಾಪನೆಯಾಗಿದ್ದ ರಾಮನ್ ಇನ್ಸ್ಟಿಟ್ಯೂಟ್ ದೇಶದ ಹೆಮ್ಮೆಯ ಸಂಸ್ಥೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಚಂದ್ರಯಾನ, ಆದಿತ್ಯ ಎಲ್–1 ಸೇರಿದಂತೆ ಭಾರತದ ಬಾಹ್ಯಾಕಾಶ ಯೋಜನೆಗಳಲ್ಲಿ ಸಂಸ್ಥೆಯ ವಿಜ್ಞಾನಿಗಳು ಭಾಗಿಯಾಗಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಅಪರಿಮಿತ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.
‘ದೇಶದ ಸಾಮೂಹಿಕ ಬೆಳವಣಿಗೆಗೆ ವಿಜ್ಞಾನಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕು. ಸಿ.ವಿ.ರಾಮನ್ ಅವರ ದೂರದೃಷ್ಟಿ ಅಳವಡಿಸಿಕೊಳ್ಳಬೇಕು’ ಎಂದೂ ಸಲಹೆ ನೀಡಿದರು.
ಹೋಮಿ ಭಾಭಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಕುಲಪತಿ ಅನಿಲ್ ಕಾಕೋಡ್ಕರ್, ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.