ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಬಾಗಲೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣವನ್ನು ಮಂಗಳವಾರ ಉದ್ಘಾಟಿಸಲಾಯಿತು.
ಒಟ್ಟು 2,400 ಚದರಡಿ ವಿಸ್ತೀರ್ಣದಲ್ಲಿ ಶಿಕ್ಷಕ–ಪೋಷಕರ ಸಂಘದ ವತಿಯಿಂದ ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಈ ಕ್ರೀಡಾ ಸಂಕೀರ್ಣದಲ್ಲಿ ಮಲ್ಟಿ ಜಿಮ್ ಹಾಗೂ ಶಟಲ್ ಕೋರ್ಟ್ಗಳನ್ನು ಸ್ಥಾಪಿಸಲಾಗಿದೆ.
ಈ ವೇಳೆ ಮಾತನಾಡಿದ ಪ್ರಾಂಶುಪಾಲ ಎಸ್.ಕಣ್ಣನ್, ‘ಒತ್ತುವರಿಯಾಗಿದ್ದ ಶಾಲೆಯ ಜಾಗವನ್ನು ಮರುಸರ್ವೆ ಮಾಡಿಸಿ, ಒತ್ತುವರಿ ತೆರವುಗೊಳಿಸಿ, ಶಾಲೆಗೆ ಮತ್ತೆ ಜಾಗವನ್ನು ಮಂಜೂರು ಮಾಡಿಸಲಾಯಿತು. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಮುನೇಗೌಡ ಹಾಗೂ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ಸಹಕಾರ ನೀಡಿದರು. ಹೀಗಾಗಿ ಈ ಜಾಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಲು ಸಾಧ್ಯವಾಯಿತು’ ಎಂದು ತಿಳಿಸಿದರು.
ಶಾಲೆಯಲ್ಲಿ 750 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಗತ್ಯ. ಇದಕ್ಕೆ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ಕ್ರೀಡಾ ಸಂಕೀರ್ಣ ನಿರ್ಮಿಸಲಾಗಿದೆ. ಇದು ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಬಾಗಲೂರು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಮುನೇಗೌಡ, ಉಪಪ್ರಾಂಶುಪಾಲರಾದ ಸುಂದರ್ಕುಮಾರ್.ಪಿ, ನವೀನ್ಕುಮಾರ್ ಭಕ್ತ, ಶಿಕ್ಷಕ ಪ್ರಹಲ್ಲಾದ್.ಎಂ, ಶಿಕ್ಷಕ–ಪೋಷಕರ ಸಂಘದ ಪದಾಧಿಕಾರಿಗಳಾದ ಬೈರೇಗೌಡ, ರಾಘವೇಂದ್ರ, ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.