ಬೆಂಗಳೂರು: ಚಿನ್ನಾಭರಣ ಅಂಗಡಿಗಳಲ್ಲಿ ಕೆಲಸಗಾರರ ಗಮನವನ್ನು ಬೇರೆಡೆಗೆ ಸೆಳೆದು, ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಾಲ್ವರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಹೀದಾ ಬಾನು (34), ಶಬೀನಾ ಬಾನು (20), ಶಫೀವುಲ್ಲಾ (41), ಅಮೀನಾಬಿ (62) ಬಂಧಿತರು.
‘ಠಾಣಾ ವ್ಯಾಪ್ತಿಯ ಚಿನ್ನಾಭರಣ ಮಳಿಗೆಯ ಮಾಲೀಕರೊಬ್ಬರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಯಿತು. ಬಂಧಿತರಿಂದ ₹4.75 ಲಕ್ಷ ಮೌಲ್ಯದ 78 ಗ್ರಾಂ ತೂಕದ ಚಿನ್ನದ ಸರವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಚಿನ್ನ ಖರೀದಿಸುವ ನೆಪದಲ್ಲಿ ಇಬ್ಬರು ಮಹಿಳೆಯರು ಬುರ್ಖಾ ಧರಿಸಿ ಚಿನ್ನಾಭರಣ ಮಳಿಗೆಗೆ ಬಂದಿದ್ದರು. ಸಿಬ್ಬಂದಿಯೊಬ್ಬರು ಚಿನ್ನಾಭರಣ ತೋರಿಸುತ್ತಿದ್ದ ಸಂದರ್ಭದಲ್ಲಿ ಅವರ ಗಮನವನ್ನು ಬೇರೆಡೆಗೆ ಸೆಳೆದು 78 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದರು’ ಎಂದು ತಿಳಿಸಿದರು.
‘ಇಸ್ರೊ ಲೇಔಟ್ನ ದೇವರಕೆರೆ ಪಕ್ಕದ ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿಕೊಂಡು ಚರ್ಚಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿತರನ್ನು 8 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಚಿನ್ನವನ್ನು ಭರಮಸಾಗರದ ಚಿನ್ನಾಭರಣ ಕೆಲಸಗಾರರೊಬ್ಬರಿಗೆ ಆರೋಪಿಗಳು ಮಾರಾಟ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.