ADVERTISEMENT

ವಾಲ್ಮೀಕಿ ನಿಗಮ ಪ್ರಕರಣ: ಸಿಬಿಐಗೆ ಹಸ್ತಾಂತರವಾಗದ ಕಡತ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 7 ಜೂನ್ 2024, 23:13 IST
Last Updated 7 ಜೂನ್ 2024, 23:13 IST
ಸಿಬಿಐ ಲಾಂಛನ
ಸಿಬಿಐ ಲಾಂಛನ   

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದರೂ ಇನ್ನೂ ತನಿಖೆ ಆರಂಭಿಸಿಲ್ಲ.

ಈ ಮೊದಲು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವು ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿತ್ತು. ಅದಾದ ಮೇಲೆ ಹಣ ಅಕ್ರಮ ವರ್ಗಾವಣೆಗೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಮಹೇಶ್ ಜೆ. ಅವರ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಸಿಬಿಐ ತನಿಖೆ ಆರಂಭಿಸಿಲ್ಲ ಎಂದು ಮೂಲಗಳು ಹೇಳಿವೆ.

‘ಇದುವರೆಗೂ ನಡೆಸಿದ ತನಿಖೆ ಪ್ರಗತಿಯ ಕಡತಗಳು ನಮ್ಮಲ್ಲಿಯೇ ಇವೆ. ಸಿಬಿಐ ಅಧಿಕಾರಿಗಳು ಕೇಳಿದರೆ ಕಡತ ಹಸ್ತಾಂತರಿಸಲಾಗುವುದು. ಎಸ್‌ಐಟಿಯೇ ತನಿಖೆ ಮುಂದುವರಿಸಿದೆ. ಕಸ್ಟಡಿಗೆ ಪಡೆದಿರುವ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಜೆ.ಜೆ.ಪದ್ಮನಾಭ್‌, ಲೆಕ್ಕಾಧಿಕಾರಿಯಾಗಿದ್ದ ಪರುಶುರಾಮ್‌ ಜಿ. ದುರ್ಗಣ್ಣನವರ ಅವರನ್ನು ಹೆಚ್ಚಿನ ವಿಚಾರಣೆಗೆ ಮತ್ತೆ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ತೋರಿಸಿ ಇಬ್ಬರನ್ನೂ ಶುಕ್ರವಾರ ಸಹ ವಿಚಾರಣೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ಹೈದರಾಬಾದ್ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ–ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಸತ್ಯನಾರಾಯಣ್‌ ಸೇರಿದಂತೆ ಈ ಪ್ರಕರಣದಲ್ಲಿ ಇದುವರೆಗೂ ಆರು ಮಂದಿಯನ್ನು ಎಸ್‌ಐಟಿ ಬಂಧಿಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ.ನಾಗೇಂದ್ರ ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.