ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶ ರಾಜ್ಯ ಘಟಕಗಳಿಗೆ ಆಗಸ್ಟ್ 25ರಂದು ಚುನಾವಣೆ ನಡೆಯಲಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಚುನಾವಣಾಧಿಕಾರಿ ಎಂ.ಬಿ. ದ್ಯಾಬೇರಿ, ‘ಆ.1ರಿಂದ ಆ.7ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಆ.8ರಂದು ನಾಮಪತ್ರ ಪರಿಶೀಲನೆ, ಆ.11 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಆಗಿದೆ. ಆ.25ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ ಮತ ಎಣಿಕೆ ನಡೆಯಲಿದೆ’ ಎಂದು ತಿಳಿಸಿದರು.
ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಸೇರಿ ಒಟ್ಟು 41 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೊತೆಗೆ ಮಹಾಸಭಾದ ಕೇಂದ್ರ ಕಾರ್ಯಕಾರಿ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ. ಕೇಂದ್ರ ಕಾರ್ಯಕಾರಿ ಸಮಿತಿಗೆ ಕರ್ನಾಟಕದ 30, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರಗಳಿಂದ ತಲಾ ಒಬ್ಬ ಮಹಿಳೆ ಸೇರಿ ತಲಾ 5 ಸದಸ್ಯರ ಆಯ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
31 ಜಿಲ್ಲೆ, ಒಂದು ಮಹಾನಗರ ಪಾಲಿಕೆ, 176 ತಾಲ್ಲೂಕು ಘಟಕಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿಗೆ ಸದಸ್ಯರ ಆಯ್ಕೆ ಈಗಾಗಲೇ ಆಗಿದೆ ಎಂದು ರಾಜ್ಯ ಘಟಕದ ಚುನಾವಣಾಧಿಕಾರಿ ಸಿ.ಎಸ್. ವೀರೇಶ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.