ಬೀದರ್: ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಮಾಡುತ್ತಿರುವುದು, ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸದಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದ ಗುಂಪಾ ರಿಂಗ್ರೋಡ್ನಲ್ಲಿ ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಆನಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಹಾಸ್ಟೆಲ್ ವ್ಯವಸ್ಥೆ ಆಗದ ಕಾರಣ ಗ್ರಾಮೀಣ ಭಾಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ವಿದ್ಯಾರ್ಥಿ ವೇತನ ನೀಡದ ಕಾರಣ ಓದಿಗೆ ಸಮಸ್ಯೆಯಾಗುತ್ತಿದೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ ಎಂದರು.
ಹಾಸ್ಟೆಲ್ಗಳಲ್ಲಿ ಪ್ರವೇಶಕ್ಕೆ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆದಷ್ಟು ಶೀಘ್ರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್ ಸಂಖ್ಯೆಯನ್ನು ಹೆಚ್ಚಿಸಬೇಕು. ಬಾಕಿ ಉಳಿಸಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ, ರಾಜ್ಯ ಕಾರ್ಯಕಾರಣಿ ಸದಸ್ಯ ಸಾಯಿಕಿರಣ್, ಎಬಿವಿಪಿ ತಾಲ್ಲೂಕು ಸಂಚಾಲಕ ಮಹೇಶ, ಪವನ್ ಕುಂಬಾರ, ನಾಗರಾಜ್ ಸುಲ್ತಾನಪುರ, ಅಭಿಷೇಕ್ ಶಂಭು, ಆನಂದ, ಸಾಯಿ ಕಿರಣ್, ಪದ್ಮಾಕರ್, ಹರೀಶ್ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.