ADVERTISEMENT

ಬೀದರ್‌| ಅಂಬೇಡ್ಕರ್‌ ಜಯಂತಿ; ರಾತ್ರಿ 10ರವರೆಗೆ ಅವಕಾಶ- ಪೊಲೀಸ್‌ ವರಿಷ್ಠಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 16:32 IST
Last Updated 6 ಏಪ್ರಿಲ್ 2024, 16:32 IST
ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಅಂಗವಾಗಿ ಬೀದರ್‌ನಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿದರು
ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಅಂಗವಾಗಿ ಬೀದರ್‌ನಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿದರು   

ಬೀದರ್‌: ‘ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿಯ ದಿನವಾದ ಏ. 14ರಂದು ರಾತ್ರಿ 10ರ ತನಕ ಕಾರ್ಯಕ್ರಮ ಮಾಡಲು ಅವಕಾಶವಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೆರವಣಿಗೆಗೆ ಸಮಯ ನಿಗದಿಪಡಿಸಬೇಕು. ಪ್ರತಿ ಏರಿಯಾದಿಂದ ಬರುವ ಮೆರವಣಿಗೆಗೆ ಸ್ವಯಂ ಸೇವಕರನ್ನು ನಿಯೋಜನೆ ಮಾಡಬೇಕು. ಇದರಿಂದ ಪೊಲೀಸರು ಸಂಬಂಧಿಸಿದವರನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಮೆರವಣಿಗೆ ಸುಸೂತ್ರವಾಗಿ ನಡೆಯಲು ಅನುಕೂಲವಾಗುತ್ತದೆ ಎಂದರು.

ಆಸ್ಪತ್ರೆ ಮತ್ತು ನ್ಯಾಯಾಲಯ ಇರುವ ಪ್ರದೇಶಗಳಲ್ಲಿ ಹೆಚ್ಚು ಸೌಂಡ್‌ ಇರುವ ಡಿ.ಜೆ. ಬಳಸಬಾರದು. ಚುನಾವಣಾ ನೀತಿ ಸಂಹಿತೆ ಪ್ರಕಾರ ರಾತ್ರಿ ಹತ್ತು ಗಂಟೆಯವರೆಗೆ ಕಾರ್ಯಕ್ರಮಕ್ಕೆ ಅವಕಾಶವಿದೆ. ಮೆರವಣಿಗೆ ಪಾಳಿ ಪ್ರಕಾರ ಒಂದಾದ ನಂತರ ಒಂದು ಬಂದರೆ ಯಾವುದೇ ಗೊಂದಲ ಉಂಟಾಗುವುದಿಲ್ಲ. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಸಂದರ್ಭದಲ್ಲಿ ಉತ್ತಮ ಸಂದೇಶಗಳನ್ನು ಬರೆದುಕೊಂಡು ಬರಬೇಕು. ಸಮಾಜಕ್ಕೆ ಉತ್ತಮ ಸಂದೇಶ ಹೋಗುತ್ತದೆ. ಅಂಬೇಡ್ಕರ್ ಅವರ ಉತ್ತಮ ಭಾವಚಿತ್ರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ಕೊಡುವಂತಾಗಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಅಂಬೇಡ್ಕರ್ ಜಯಂತಿಯನ್ನು ಎಲ್ಲರೂ ಸೇರಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸೋಣ. ಏ. 14ರಂದು ಬೆಳಿಗ್ಗೆ 9ಕ್ಕೆ ನಗರದ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಗೌರವ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು ಎಚ್.ಎಸ್., ನಗರಸಭೆ ಪೌರಾಯುಕ್ತ ಶಿವರಾಜ ರಾಥೋಡ್‌, ಮುಖಂಡರಾದ ಅನಿಲಕುಮಾರ ಬೇಲ್ದಾರ್‌,, ಬಾಬುರಾವ್‌ ಪಾಸ್ವಾನ್‌, ಮಾರುತಿ ಬೌದ್ದೆ, ರಾಜು ಕಡ್ಯಾಳ, ಮಹೇಶ ಗೋರನಾಳಕರ್, ವಿಷ್ಣುವರ್ಧನ್‌ ವಾಲದೊಡ್ಡಿ, ಕಲ್ಯಾಣರಾವ್ ಭೋಸ್ಲೆ, ರಾಜಕುಮಾರ ಬನ್ನೂರ, ಸುಧಾಕರ್ ಯಕಂಬೇಕರ್ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.