ಬೀದರ್: ನಗರಸಭೆಯಿಂದ ನಗರದಲ್ಲಿ ಗುರುವಾರ ಪಾದಚಾರಿ ಮಾರ್ಗ, ರಸ್ತೆ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಗುಂಪಾ ರಿಂಗ್ರೋಡ್, ಬಿ.ವಿ. ಭೂಮರಡ್ಡಿ ಕಾಲೇಜು ರಸ್ತೆಯಲ್ಲಿ ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್ ನೇತೃತ್ವದಲ್ಲಿ ಜೆಸಿಬಿ ಮೂಲಕ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲಾಯಿತು.
ಪಾದಚಾರಿ ಮಾರ್ಗ, ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಶೆಡ್ ಹಾಕಿ ಟೀ ಸ್ಟಾಲ್, ಹೋಟೆಲ್, ಮಳಿಗೆಗಳನ್ನು ನಡೆಸಲಾಗುತ್ತಿತ್ತು. ಇದರಿಂದಾಗಿ ಪಾದಚಾರಿಗಳಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿತು.
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ‘ಪ್ರಜಾವಾಣಿ’ ಕೂಡ ಬೆಳಕು ಚೆಲ್ಲಿತ್ತು.
‘ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಶೆಡ್ ನಿರ್ಮಿಸಿದರೆ ಅದನ್ನು 24 ಗಂಟೆಗಳಲ್ಲಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆಯಿಂದ ಕ್ರಮ ಜರುಗಿಸಲಾಗುವುದು’ ಎಂದು ಪೌರಾಯುಕ್ತ ಶಿವರಾಜ ರಾಠೋಡ್ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.