ಹುಲಸೂರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸೋಮವಾರ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಡಿ.ಅರಿಫೋದಿನ ಮಾತನಾಡಿ, ‘ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಸಾರ್ವಜನಿಕರು ಈ ರೋಗದ ಬಗ್ಗೆ ಜಾಗೃತಿ ವಹಿಸುವ ಮೂಲಕ ಕ್ಯಾನ್ಸರ್ ತಡೆಗಟ್ಟಲು ಸಹಕರಿಸಬೇಕು’ ಎಂದು ಹೇಳಿದರು.
ವಿಶ್ವದಲ್ಲಿ ಒಟ್ಟಾರೆ 2 ಕೋಟಿ ಜನರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಈ ಕಾಯಿಲೆ ಇದೆ. ಕ್ಯಾನ್ಸರ್ ಗುಣಪಡಿಸಬಹುದಾಗಿದ್ದು, ಇದಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಪ್ರತಿಯೊಬ್ಬರೂ ಆರೋಗ್ಯಗರ ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ಕ್ಯಾನ್ಸರ್ನಿಂದ ದೂರ ಇರಬೇಕು ಎಂದು ಹೇಳಿದರು.
ಆಸ್ಪತ್ರೆಯ ಮಕ್ಕಳ ವೈದ್ಯಾಧಿಕಾರಿ ಮಲ್ಲಿಕಾರ್ಜುನ, ಕ್ಯಾನ್ಸರ್ ರೋಗದ ಗುಣಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುವುದು, ಸುಸ್ತು, ಕೆಮ್ಮು, ದೀರ್ಘಕಾಲದ ಗಾಯಗಳು, ಕ್ಯಾನ್ಸರ್ ರೋಗದ ಗುಣ ಲಕ್ಷಣಗಳಾಗಿವೆ ಎಂದರು.
ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಕೇಂದ್ರದ ಎನ್ಸಿಡಿ ವಿಭಾಗದ ಡಾ.ಅಬ್ದುಲ್ ಮಾಜಿದ ಹಾಗೂ ದಿಗಬಂರ ಮೇತ್ರೆ ಅವರೂ ರೋಗದ ಚಿಕಿತ್ಸೆ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ಸಂಗೀತಾ ಸುಂಕನಾಳೆ, ಸಚಿನಕುಮಾರ ಹೀರೆಮಣಿ, ರೋಜಲಿನ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.