ಬೀದರ್: ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ. ಇದನ್ನು ತಡೆಯಬೇಕಾದರೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ನರಸಪ್ಪ ತಿಳಿಸಿದರು.
ನಗರದ ಆರ್.ವಿ.ಬಿಡಪ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.
ಮಕ್ಕಳ ಶಿಕ್ಷಣದ ಮಹತ್ವ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕಿದೆ. ಶಿಕ್ಷಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡರೆ ಸಾಲದು. ಅದಕ್ಕೆ ಪಾಲಕರು ಸಹ ಕೈ ಜೋಡಿಸಬೇಕು ಎಂದು ಹೇಳಿದರು.
ಸಾರ್ವಜನಿಕರು ಎಲ್ಲರೂ ಇದು ತಮ್ಮ ಕೆಲಸ ಎಂದು ಭಾವಿಸಿ ಬಾಲ ಕಾರ್ಮಿಕ ವ್ಯವಸ್ಥೆ ಸಮಾಜದಿಂದ ತೊಲಗುವಂತೆ ಮಾಡಬೇಕು. ಶಿಕ್ಷಣದಿಂದ ವಂಚಿತರಾಗಿ ಬೇರೆ ಬೇರೆ ಕೆಲಸಗಳಿಗೆ ತೊಡಗಿರುವ ಬಾಲಕಾರ್ಮಿಕರು ಕಂಡು ಬಂದರೆಲಿ ಪ್ರಕರಣವನ್ನು ದಾಖಲಿಸಬೇಕು ಎಂದರು.
ಜಯಶ್ರೀ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳ ದುಡಿಮೆ ದೂರ ಮಾಡಿ, ಕಡ್ಡಾಯ ಶಿಕ್ಷಣ ನೀಡಿ ಶಾಲೆಗೆ ಕಳುಹಿಸಬೇಕು. ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಜತೆಗೆ ಶಾಲೆಯಲ್ಲಿ ಒಳ್ಳೆಯ ವಾತಾವಾರಣ ಕಲ್ಪಿಸಿಕೊಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಪ್ರಾಂಶುಪಾಲ ಮುನಿಯಪ್ಪ ಟಿ. ಮಾತನಾಡಿ, ಪ್ರತಿ ಮಗು ಕೂಡ ಶಿಕ್ಷಣ ಪಡೆದು ಉತ್ತಮವಾಗಿ ಜೀವಿಸುವ ಹಕ್ಕು ಹೊಂದಿದೆ. ಬಾಲಕಾರ್ಮಿಕ ಪದ್ಧತಿ ನಿವಾರಣೆ ಆಗಬೇಕಾದರೆ ಎಲ್ಲ ಮಕ್ಕಳಿಗೆ ಶಿಕ್ಷಣ ಅವಶ್ಯ. ಮಕ್ಕಳು ಉನ್ನತವಾಗಿ ಬೆಳೆಯಲು ಶಿಕ್ಷಣ ಬೇಕು ಎಂದರು.
ಸಹಾಯಕ ಪ್ರಾಧ್ಯಾಪಕ ಗಣಪತಿ ಟಿ., ಭಾಗೀರಥಿ, ಆಕಾಂಕ್ಷ, ಪ್ರೊ. ಆರ್.ವಿ. ಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ಭೂರೆ, ರಮೇಶ ಹಂಗರಗಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.