ಬೀದರ್: ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ ಅಗೌರವ ತೋರಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ರೆಡ್ಡಿ ಸಮಾಜ ಆಗ್ರಹಿಸಿದೆ.
ಈ ಸಂಬಂಧ ಸಮಾಜದ ಪ್ರಮುಖರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.
ಜಯಂತಿ ದಿನ ಯಾವುದೋ ಒಂದು ಮೂಲೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮನವರ ಫೋಟೋ ತಂದು ಜಯಂತಿ ಆಚರಿಸಿ ಅಗೌರವ ತೋರಿದ್ದಾರೆ. ಈ ಸಂಬಂಧ ಈಗಾಗಲೇ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.
ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮೇ 21ರಂದು ಪಂಚಾಯಿತಿ ಕಚೇರಿ ಎದುರು ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರ ರೆಡ್ಡಿ, ಯುವ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ರೆಡ್ಡಿ ಆಣದೂರ್, ಪ್ರಮುಖರಾದ ಪೆಂಟಾರೆಡ್ಡಿ, ವಿಜಯರೆಡ್ಡಿ, ದೀಪಕರೆಡ್ಡಿ, ಜಗನ್ನಾಥ್ ರೆಡ್ಡಿ, ಯಮರೆಡ್ಡಿ, ಕೃಷ್ಣಾರೆಡ್ಡಿ, ಸುಭಾಷ್ ರೆಡ್ಡಿ, ವೆಂಕಟರೆಡ್ಡಿ, ಬಲವಂತ ರೆಡ್ಡಿ, ಸಾಯಿನಾಥ್ ರೆಡ್ಡಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.