ADVERTISEMENT

ದೇಶದ್ರೋಹಿಗಳ ಪರ ನಿಂತ ಸಚಿವರನ್ನು ಸಂಪುಟದಿಂದ ಕೈಬಿಡಿ: ಭಗವಂತ ಖೂಬಾ ಒತ್ತಾಯ

ಕೇಂದ್ರ ಸಚಿವರ ಭಗವಂತ ಖೂಬಾ ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 13:03 IST
Last Updated 5 ಮಾರ್ಚ್ 2024, 13:03 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ‘ಪಾಕಿಸ್ತಾನ್ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳ ಪರ ನಿಂತ ಸಚಿವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಘಟನೆ ನಡೆದಾಗ ಸಚಿವರುಗಳು ಅದನ್ನು ಖಂಡಿಸಲಿಲ್ಲ. ಅವರನ್ನು ರಕ್ಷಿಸುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದರು. ಎಫ್‌ಎಸ್‌ಎಲ್‌ ವರದಿ ಬರುವುದಕ್ಕಿಂತ ಮುಂಚೆ ದೇಶದ್ರೋಹಿಗಳಿಗೆ ಕ್ಲೀನ್‌ ಚಿಟ್‌ ನೀಡಿದ್ದರು. ಈಗ ಘೋಷಣೆ ಕೂಗಿರುವುದು ವರದಿಯಿಂದ ದೃಢಪಟ್ಟಿದೆ. ಅಂತಹ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.

ಮಾರ್ಚ್‌ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೀದರ್‌ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಕೆಲಸಗಳು ಆರಂಭಗೊಂಡಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿದ ನಂತರ ಮುಖ್ಯಮಂತ್ರಿ ಜಿಲ್ಲೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಹಿಂದಿನ ಬಿಜೆಪಿ ಸರ್ಕಾರ ಬಸವಕಲ್ಯಾಣದ ನೂತನ ಅನುಭವ ಮಂಟಪಕ್ಕೆ ₹650 ಕೋಟಿ ಅನುದಾನ ಮಂಜೂರು ಮಾಡಿ, ₹200 ಕೋಟಿ ಬಿಡುಗಡೆಗೊಳಿಸಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆಗೊಳಿಸಿಲ್ಲ. ಇದರಿಂದ ಬಸವ ಭಕ್ತರಿಗೆ ನೋವಾಗಿದೆ. ಬಸವಕಲ್ಯಾಣ ಸಮೀಪ ಶಿವಾಜಿ ಪಾರ್ಕ್‌ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ 10 ಎಕರೆ ಜಮೀನು ನೀಡಿದೆ. ಆದರೆ, ಅದರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಯಾವುದೇ ಅನುದಾನ ನೀಡಿಲ್ಲ ಎಂದು ಆರೋಪಿಸಿದ್ದಾರೆ. 

ಬೀದರ್‌ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಹಿಂದಿನ ಬಿಜೆಪಿ ಸರ್ಕಾರ ತೀರ್ಮಾನಿಸಿತ್ತು. ಅದನ್ನು ಅನುಷ್ಠಾನಗೊಳಿಸಿಲ್ಲ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.