ಭಾಲ್ಕಿ: ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ರೂಪಿಸುವ, ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುವ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬಿ.ಎಸ್.ಪಾಟೀಲ ಹೇಳಿದರು.
ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಶುಕ್ರವಾರ ಆಯೋಜಿಸಿದ್ದ ಸಿಇಟಿ, ನೀಟ್ ಮತ್ತು ಐಐಟಿ ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಶಿಸ್ತು, ವಿನಯತೆ, ಮಾನವೀಯ ಮೌಲ್ಯಗಳು, ಉತ್ತಮ ಚಾರಿತ್ರ್ಯ ಬೆಳೆಸಿಕೊಂಡಾಗ ಮಾತ್ರ ದೇಶಕ್ಕೆ ಏನನ್ನಾದರೂ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಕೇವಲ ಶಿಕ್ಷಣ ಪಡೆದರಷ್ಟೇ ವಿದ್ಯಾರ್ಥಿಗಳ ಜೀವನ ಪೂರ್ಣವಾಗುವುದಿಲ್ಲ. ರ್ಯಾಂಕ್ ಪಡೆದರಷ್ಟೇ ಭವಿಷ್ಯ ಉಜ್ವಲವಾಗುವುದಿಲ್ಲ. ವಿದ್ಯಾರ್ಥಿಗಳು ಅದ್ಭುತ ಚಿಂತನೆ, ದೇಶಾಭಿಮಾನ ಬೆಳೆಸಿಕೊಂಡು ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ, ಸಂಸ್ಕಾರ ಪಡೆದು ಪಾಲಕರ ನಿರೀಕ್ಷೆಗಳನ್ನು ಪೂರೈಸಬೇಕು ಎಂದು ತಿಳಿಸಿದರು.
ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆಗೆ ಮಾತ್ರ ಗಮನ ಹರಿಸಬೇಕು. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ಸಿಇಟಿಯಲ್ಲಿ ರಾಜ್ಯಕ್ಕೆ 38ನೇ ರ್ಯಾಂಕ್ ಪಡೆದ ಮಹೇಶ ಚನ್ನಬಸವರಾಜ, ನೀಟ್ನಲ್ಲಿ 691 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವ ಸಂಜನಾ ದಶವಂತ, ಜೆಇಇ ಅಡ್ವಾನ್ಸ್ನಲ್ಲಿ ದೇಶಕ್ಕೆ 4ನೇ ರ್ಯಾಂಕ್ ಪಡೆದ ಗಣೇಶ ಮಧುಕರ ಸೇರಿದಂತೆ 250ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ, ಶೋಭಾ ಬಿ.ಎಸ್.ಪಾಟೀಲ, ಕಲಬುರಗಿ ಲೋಕಾಯುಕ್ತ ಅಧಿಕಾರಿ ಆಂತೋನಿ ಜಾರ್ಜ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಮಧುಕರ ಗಾಂವಕರ್ ಇದ್ದರು.
ಬಸವಣ್ಣನವರು ಸಮಾನತೆಗಾಗಿ ಚಳವಳಿ ನಡೆಸಿದ ನೆಲದಲ್ಲಿ ಅದೇ ಧ್ಯೇಯದೊಂದಿಗೆ ಪಟ್ಟದ್ದೇವರು ಎಲ್ಲ ವರ್ಗದ ಮಕ್ಕಳಿಗೆ ಶಿಕ್ಷಣ ಕಲ್ಪಿಸುತ್ತಿರುವುದು ಹೆಮ್ಮೆಯ ಸಂಗತಿ ಬಿ.ಎಸ್.ಪಾಟೀಲ ಲೋಕಾಯುಕ್ತ ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.