ಬೀದರ್: ನಗರದಲ್ಲಿ ಶನಿವಾರ ಸತತ ಐದನೇ ದಿನವೂ ತೆರವು ಕಾರ್ಯಾಚರಣೆ ನಡೆಯಿತು.
ನಗರದ ಬಿ.ವಿ. ಭೂಮರಡ್ಡಿ ಕಾಲೇಜು, ಮೋಹನ್ ಮಾರ್ಕೆಟ್ನಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗದ ಅತಿಕ್ರಮಣವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಲಾಯಿತು.
ಮೋಹನ್ ಮಾರ್ಕೆಟ್ನಲ್ಲಿ ಜಿ.ವಿ ಮಾಲ್ನವರು ಅಕ್ರಮವಾಗಿ ನಿರ್ಮಿಸಿದ್ದ ಶೆಡ್, ಫ್ಲೆಕ್ಸ್ಗಳನ್ನು ತೆರವುಗೊಳಿಸಿದರು. ಶುಕ್ರವಾರ ತೆರವು ಕಾರ್ಯಕ್ಕೆ ಮುಂದಾದಾಗ ಮಾಲ್ನವರು ಅದಕ್ಕೆ ಅಡ್ಡಿಪಡಿಸಿ ಅಧಿಕಾರಿ, ಸಿಬ್ಬಂದಿಗೆ ಬೆದರಿಕೆಯೊಡ್ಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತವು ಮಾಲ್ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿತ್ತು. ಇದರಿಂದ ಮೆತ್ತಗಾದ ಅವರು ಶನಿವಾರ ತೆರವು ಕಾರ್ಯಾಚರಣೆಗೆ ಸಹಕಾರ ನೀಡಿದರು. ಈ ವೇಳೆ ಸ್ಥಳದಲ್ಲಿ ಹಲವರು ನೆರೆದಿದ್ದರು.
‘ಮಾಲ್ ವ್ಯವಸ್ಥಾಪಕ ಬಾಲು ಹಾಗೂ ಸಿಬ್ಬಂದಿ ಸಂತೋಷ್ ಜಾಧವ್ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೀದರ್ ಮ್ಯಾಜಿಸ್ಟ್ರೇಟ್ ವಿರುದ್ಧ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ, ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್, ಡಿವೈಎಸ್ಪಿ ಶಿವನಗೌಡ ಪಾಟೀಲ ಅವರು ಜಂಟಿಯಾಗಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.