ಭಾಲ್ಕಿ: ಇಲ್ಲಿಯ ಹಿರೇಮಠದದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಬಸವಾದಿ ಶರಣರ ವಚನಗಳ ಹಸ್ತಪ್ರತಿಗಳನ್ನು ಶೋಧಿಸಿ, ಅವುಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದರು. ಈ ಕಾರ್ಯಕ್ಕಾಗಿ ಅವರು ಅನೇಕ ಕಷ್ಟ, ನೋವುಗಳನ್ನು ಅನುಭವಿಸಿದ್ದರು. ಸ್ವಂತ ಜೀವನ ಬಡತನದಲ್ಲಿಯೇ ಕಳೆದು ವಚನ ಸಾಹಿತ್ಯದ ಶ್ರೀಮಂತಿಕೆ ಹೆಚ್ಚಿಸಿದ್ದರು ಎಂದು ತಿಳಿಸಿದರು.
ಸಾಹಿತಿ ಬಿ.ಎಂ. ಶ್ರೀಕಂಠಯ್ಯನವರು ಹೇಳಿರುವ ಹಾಗೆ ಹಳಕಟ್ಟಿ ಅವರು ನಿಜವಾಗಿಯೂ ವಚನ ಗುಮ್ಮಟವಾಗಿದ್ದರು. ಶರಣರ ವಚನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಾವು ವಚನ ಸಾಹಿತ್ಯ ಸಂರಕ್ಷಣೆ ಮಾಡಿ ಹಳಕಟ್ಟಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.
ಮಹಾಲಿಂಗ ಸ್ವಾಮೀಜಿ, ಸಾಹಿತಿ ರಾಜು ಜುಬರೆ ಮಾತನಾಡಿದರು. ಆಡಳಿತಾಧಿಕಾರಿ ಮೋಹನರಡ್ಡಿ, ತುಮಕೂರಿನ ಪ್ರಶಾಂತ ಉಪಸ್ಥಿತರಿದ್ದರು. ಗುರುಪ್ರಸಾದ ಶಾಲೆಯ ಮುಖ್ಯಶಿಕ್ಷಕ ಬಾಬು ಬೆಲ್ದಾಳ, ಸವಿತಾ ಭೂರೆ ಸೇರಿದಂತೆ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.