ಬೀದರ್: ಹಾಸ್ಟೆಲ್ ಮಕ್ಕಳ ಸಮಸ್ಯೆ ಕೊನೆಗೊಳ್ಳಬೇಕಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಿಂಗಳಿಗೆ ಒಂದು ಸಲವಾದರೂ ಹಾಸ್ಟೆಲ್ನಲ್ಲಿ ವಾಸ್ತವ್ಯ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಹಾಗೂ ಸದಸ್ಯ ಶಶಿಧರ ಕೋಸಂಬೆ ಸಲಹೆ ಮಾಡಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ವಿಚಾರಣೆ ಸಭೆಯಲ್ಲಿ ಮಾತನಾಡಿ ಹಾಸ್ಟೆಲ್ಗಳ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.
ಕೆ. ನಾಗಣ್ಣಗೌಡ ಮಾತನಾಡಿ, ಹಾಸ್ಟೆಲ್ ಕಟ್ಟಡದ ಮೇಲೆ ಸೋಲಾರ್ ಫಲಕ ಕಾಣಿಸುತ್ತವೆ. ಆದರೆ, ಬೆಳಿಗ್ಗೆ ಸ್ನಾನಕ್ಕೆ ಬಿಸಿ ನೀರು ಸಿಗಲ್ಲ. ಸ್ನಾನ ಮಾಡದ ಕಾರಣಕ್ಕೆ ಎಷ್ಟೋ ಮಕ್ಕಳಲ್ಲಿ ಚರ್ಮ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕೆಲ ಹಾಸ್ಟೆಲ್ಗಳಲ್ಲಿ ಸ್ಥಳೀಯ ಮಕ್ಕಳಿಗೆ ಪ್ರವೇಶ ಕೊಡಲಾಗುತ್ತದೆ. ಈ ಮಕ್ಕಳು ಹಾಸ್ಟೆಲ್ನಲ್ಲಿ ಊಟ, ತಿಂಡಿ ಮಾಡುತ್ತಾರೆ. ಆದರೆ, ವಾಸ್ತವ್ಯಕ್ಕೆ ಮನೆಗೆ ಮರಳುತ್ತಾರೆ. ಹಾಸ್ಟೆಲ್ನಲ್ಲಿ ಹಾಜರಾತಿ, ಮನೆಯಲ್ಲಿ ವಸತಿ ಎಂಬಂತಾಗಿದೆ. ಹಾಸ್ಟೆಲ್ ಸಿಬ್ಬಂದಿಯ ಈ ನಿರ್ಲಕ್ಷ್ಯದಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಸ್ಥಳೀಯರಿಗೆ ಹಾಸ್ಟೆಲ್ನಲ್ಲಿ ಪ್ರವೇಶ ಕೊಡಬಾರದು ಎಂಬ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಾಸ್ಟೆಲ್ ಕೋಣೆಯಲ್ಲಿ ಸಮರ್ಪಕ ಬೆಳಕು ಇರುವುದಿಲ್ಲ. ಫ್ಯಾನುಗಳೂ ಕೆಲಸ ಮಾಡುವುದಿಲ್ಲ. ಅಲ್ಲಿನ ಮಕ್ಕಳು ಅಭ್ಯಾಸ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು, ಸಚಿವರು ಗ್ರಾಮ ವಾಸ್ತವ್ಯ ಮಾಡುವ ರೀತಿಯಲ್ಲಿ ಅಧಿಕಾರಿಗಳು ಹಾಸ್ಟೆಲ್ನಲ್ಲಿ ವಾಸ್ತವ್ಯ ಮಾಡಬೇಕು. ಇದರಿಂದ ಹಾಸ್ಟೆಲ್ ಮಕ್ಕಳನ್ನು ಕಾಡುತ್ತಿರುವ ಸಮಸ್ಯೆಗಳಾದರೂ ಕೊನೆಗೊಳ್ಳಬಹುದು ಎಂದು ಹೇಳಿದರು.
‘ಖಾಸಗಿ ಶಾಲಾ ವಾಹನಗಳು ಸುಸ್ಥಿತಿಯಲ್ಲಿರುವುದನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಬಸ್ ಇರುವ ಎಲ್ಲ ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.
ಶಾಲಾ ಬಸ್ನಲ್ಲಿ ‘ಆಯಾ’ ಸಹ ಇರಬೇಕು ಎಂಬ ನಿಯಮ ಇದೆ. ಇದು ಪಾಲನೆಯಾಗಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆಯ ಆರಂಭದ ದಿನವೇ ಪಠ್ಯ ಪುಸ್ತಕ ಪೂರೈಕೆಯಾಗಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ವಿಷಯದಲ್ಲಿ ಕಾಳಜಿ ವಹಿಸಬೇಕು ಎಂದರು.
ಕಪಲಾಪುರ ಗ್ರಾಮದ ವಸತಿ ಶಾಲೆಗೆ ಭೇಟಿ ನೀಡಿದಾಗ ಹಲವು ಸಮಸ್ಯೆ, ಕೊರತೆಗಳು ಕಂಡು ಬಂದವು. ಹೆಚ್ಚಿನ ಪ್ರಕರಣಗಳಲ್ಲಿ ಆಯೋಗದ ಸೂಚನೆಯ ನಂತರವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು. ಮಕ್ಕಳ ಅಪೌಷ್ಟಿಕತೆ, ಶಾಲೆ ಬಿಡುವ ಮಕ್ಕಳ ಸಮಸ್ಯೆ, ಬಾಲ ಕಾರ್ಮಿಕರ ಸಮಸ್ಯೆ, ಬಾಲ್ಯ ವಿವಾಹ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಶಿಕ್ಷಣ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.