ಹುಮನಾಬಾದ್: ‘ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರೇಣುಕಾಚಾರ್ಯರ ಜಯಂತಿ ಆಚರಣೆ ಮಾಡಬೇಕು ಎಂದು ಸರ್ಕಾರದ ಆದೇಶವಿದ್ದರೂ ತಾಲ್ಲೂಕಿನ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಚರಣೆ ಮಾಡಿಲ್ಲ’ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಆರೋಪಿಸಿದೆ.
ಈ ಕುರಿತು ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗೆ ಸಲ್ಲಿಸಿದರು.
ಬಳಿಕ ಸಂಘಟನೆಯ ಪ್ರಮುಖರು ಮಾತನಾಡಿ, ‘ಸರ್ಕಾರದ ಆದೇಶಕ್ಕೆ ಅಗೌರವ ತೋರಿದ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ಸಮಾಜದ ಜನರೆಲ್ಲರೂ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸುನಿಲ್ ಪತ್ರಿ, ಸುಭಾಷ್ ಕೆನಾಡೆ , ಮನೋಜ್ ಸಿತಾಳೆ, ಶ್ರೀನಾಥ್ ದೇವಣಿ , ದಯಾನಂದ್ ಸ್ವಾಮಿ, ಬಸಯ್ಯ ಸ್ವಾಮಿ, ಸೋಮನಾಥ್ ವರವಟ್ಟಿ, ಕಾಶಿನಾಥ್ ಜಕ್ಕಾ, ಸಂತೋಷ್, ಬಸವ, ಕಲ್ಲಯ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.