ಹುಮನಾಬಾದ್: ತಾಲ್ಲೂಕಿನ ಹುಡಗಿ ಗ್ರಾಮದ ಕರಿ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ರಥೋತ್ಸವ ಜರುಗಿತು.
ಇಲ್ಲಿನ ಹಿರೇಮಠದ ವಿರೂಪಾಕ್ಷ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಮೂರು–ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪಲ್ಲಕ್ಕಿ ಉತ್ಸವ ನಡೆಯಿತು.
ರಥೋತ್ಸವ ಹಾಗೂ ಉತ್ಸವದ ಸಂದರ್ಭದಲ್ಲಿ ಶಾಲಾ ಮಕ್ಕಳ ಕೋಲಾಟ, ಲೇಜಿಮ್, ಡೊಳ್ಳು ಕುಣಿತ, ಭಜನೆ, ಯುವಕರ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಸೆಳೆದವು.
ಬೀದರ್, ಕಲಬುರಗಿ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಭಕ್ತರು ಭಾಗವಹಿಸಿದ್ದರು.
ಪಲ್ಲಕ್ಕಿ ಉತ್ಸವ
ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ಕರಿಬಸವೇಶ್ವರರ ಪಲ್ಲಕ್ಕಿ ಉತ್ಸವ ನಡೆಯಿತು.
ರಾತ್ರಿಯಿಂದ ಶನಿವಾರ ಬೆಳಗಿನವರೆಗೂ ಉತ್ಸವ ಜರುಗಿತು. ಉತ್ಸವ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಬರುತ್ತಿದ್ದಾಗ ಭಕ್ತರು ತಮ್ಮ ಮನೆ ಮುಂದೆ ಆಕರ್ಷಕ ರಂಗೋಲಿ ಬಿಡಿಸಿ, ಶಾಲು ಹೊದಿಸಿ ಸ್ವಾಗತಿಸಿಕೊಂಡರು. ಮೆರವಣಿಗೆ ಉದ್ದಕ್ಕೂ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶನಿವಾರ ಬೆಳಿಗ್ಗೆ ಜಂಗಿ ಕುಸ್ತಿ ಸ್ಪರ್ಧೆ ನಡೆಯಿತು. ಸಂಜೆ ಸಂಗೀತ ದರ್ಬಾರ್ ಕಾರ್ಯಕ್ರಮ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.