ಬೀದರ್: ನಗರದಲ್ಲಿ ಸುಸಜ್ಜಿತವಾದ ಜಿಲ್ಲಾ ಕನ್ನಡ ಭವನ ನಿರ್ಮಿಸಬೇಕೆಂಬ ಐದು ದಶಕಗಳ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರ ಕನಸು ಈಗ ನನಸಾಗಿದೆ.
ಕನ್ನಡ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಲು ಪ್ರಶಸ್ತ್ಯವಾದ ಸ್ಥಳ ಸಿಕ್ಕಂತಾಗಿದೆ.
2017ರಲ್ಲಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಈಶ್ವರ ಬಿ. ಖಂಡ್ರೆಯವರು ಕನ್ನಡ ಭವನಕ್ಕೆ ಜಮೀನು ಮಂಜೂರು ಮಾಡಿದ್ದರು. ಈಗ ಪುನಃ ಅವರು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರ ಅವಧಿಯಲ್ಲೇ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆ ಕಾಣುತ್ತಿರುವುದು ವಿಶೇಷ.
ಕನ್ನಡ ಭವನ ನಿರ್ಮಿಸಬೇಕೆಂದು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಸತತವಾಗಿ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸುತ್ತ ಬಂದಿದ್ದರು. ಹಲವು ಜಿಲ್ಲಾ ಸಮ್ಮೇಳನಗಳಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿತ್ತು. ಹೋರಾಟಗಳು ನಡೆದಿದ್ದವು. ಅಂತಿಮವಾಗಿ 2017ರಲ್ಲಿ ಜಮೀನು ಮಂಜೂರಾಗುವ ಮೂಲಕ ಇನ್ನೇನು ಕನ್ನಡ ಭವನ ನಿರ್ಮಾಣವಾಗಲಿದೆ ಎಂಬ ಆಸೆ ಚಿಗುರೊಡೆದಿತ್ತು. ಆದರೆ, ಇಚ್ಛಾಶಕ್ತಿ ಕೊರತೆಯಿಂದ ಅದು ನನೆಗುದಿಗೆ ಬಿದ್ದಿತ್ತು. ಕುಂಟುತ್ತ–ಏಳುತ್ತ ಏಳು ವರ್ಷಗಳ ನಂತರ ಕಟ್ಟಡ ಪೂರ್ಣಗೊಂಡಿದೆ.
‘ಕನ್ನಡ ಭವನಕ್ಕೆ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ₹2 ಕೋಟಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ₹25 ಲಕ್ಷ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ₹10 ಲಕ್ಷ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಅವರ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹5 ಲಕ್ಷ, ಹಾರಕೂಡ ಚನ್ನವೀರ ಶಿವಾಚಾರ್ಯರು ₹2 ಲಕ್ಷ, ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಬಸವರಾಜ ಧನ್ನೂರ ₹1 ಲಕ್ಷ, ಕನ್ನಡಾಭಿಮಾನಿ ಹಣಮಂತ ಬುಳ್ಳಾ ಅವರು ಮೊಟ್ಟ ಮೊದಲು ₹11 ಸಾವಿರ ನೀಡಿದ್ದರು. ಒಟ್ಟು ₹2.40 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲಾಗಿದೆ. ಇನ್ನು ಹಲವಾರು ದೇಣಿಗೆ ಕೊಡಲು ಮುಂದೆ ಬಂದಿದ್ದಾರೆ. ಅದರಿಂದ ಹೊಸದಾದ ಯೋಜನೆಗಳನ್ನು ರೂಪಿಸಲಾಗುವುದು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
‘ಬೀದರ್ ನಗರದಲ್ಲಿ ಕನ್ನಡ ಭವನ ನಿರ್ಮಿಸಬೇಕೆಂದು ಐದು ದಶಕಗಳ ಬೇಡಿಕೆಯಾಗಿತ್ತು. ನನ್ನ ಅವಧಿಯಲ್ಲಿ ಅದು ಸಾಕಾರಗೊಂಡಿದ್ದು ಖುಷಿ ತಂದಿದೆ. ಗೆದ್ದರೆ ಕನ್ನಡ ಭವನ ನಿರ್ಮಾಣಕ್ಕೆ ಶ್ರಮಿಸುವೆ ಎಂದು ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಇದರ ಶ್ರೇಯ ಎಲ್ಲ ಪರಿಷತ್ತಿನ ಸದಸ್ಯರು, ಕನ್ನಡಾಭಿಮಾನಿಗಳಿಗೆ ಸಲ್ಲುತ್ತದೆ. ಭವನ ನಿರ್ಮಾಣದಿಂದ ಕನ್ನಡ ಚಟುವಟಿಕೆಗಳನ್ನು ವಿಸ್ತರಿಸಲು ಸಹಾಯವಾಗುತ್ತದೆ’ ಎಂದು ಹೇಳಿದ್ದಾರೆ.
‘ಫೆ. 3ರಂದು ಬೆಳಿಗ್ಗೆ 11ಕ್ಕೆ ನಗರದ ಚಿಕಪೇಟ್ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭವನ ಉದ್ಘಾಟಿಸುವರು. ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ. ಉದ್ಘಾಟನೆ ನಂತರ ಕವಿಗೋಷ್ಠಿ ನಡೆಯಲಿದ್ದು, 50 ಕವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ನಾನು ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಈಗ ಕನ್ನಡ ಭವನ ನಿರ್ಮಾಣವಾಗಿದ್ದು ಕನ್ನಡಾಭಿಮಾನಗಳ ಆಸೆ ಈಡೇರಿದೆ.ಸುರೇಶ ಚನಶೆಟ್ಟಿ ಜಿಲ್ಲಾಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.