ಔರಾದ್: ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ.
ತಾಲ್ಲೂಕು ಪಂಚಾಯಿತಿ ಇಒ ವೆಂಕಟ ಸಿಂಧೆ ನೇತೃತ್ವದಲ್ಲಿ ಹೆಚ್ಚು ಕೂಲಿ ಕಾರ್ಮಿಕರಿರುವ ಕಡೆಗೆ ಹೋಗಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಈಚೆಗೆ ಚಿಕ್ಲಿ (ಜೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನದ ಮಹತ್ವದ ಕುರಿತು ವಿವರಿಸಿದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸುದೇಶ ಮಾತನಾಡಿ,‘ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ದೂರವಿರಬಾರದು. ಈಗಲೇ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಾತ್ರಿ ಮಾಡಿಕೊಳ್ಳಬೇಕು. ನಿಮ್ಮ ಕುಟುಂಬದಲ್ಲಿ 18 ವರ್ಷ ತುಂಬಿದವರು ಕಡ್ಡಾಯವಾಗಿ ಮತದಾನ ಮಾಡುವಂತೆ ನೋಡಿಕೊಳ್ಳಿ. ಈ ಕುರಿತು ನಿಮಗೆ ಸಹಾಯ ಬೇಕಿದ್ದರೆ ಸಹಾಯವಾಣಿ: 8277506000 ಕರೆ ಮಾಡಿ’ ಎಂದು ತಿಳಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತದಾನವಾದ ನಾಗಮಾರಪಳ್ಳಿ, ಬೊಂತಿ, ಹೊಕ್ರಾಣಾ ಗ್ರಾಮಕ್ಕೂ ಭೇಟಿ ನೀಡಿ ಜನರಿಗೆ ಪ್ರಜಾಪ್ರಭುತ್ವ ಮತ್ತು ಮತದಾನದ ಮಹತ್ವ ತಿಳಿಸಿಕೊಟ್ಟರು. ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲೂ ಮತದಾನ ಜಾಗೃತಿ ಜಾಥಾ ನಡೆಸಿದರು.
ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಆನಂದ ಬಸವರಾಜ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ, ತಾಂತ್ರಿಕ ಸಹಾಯಕ ಶರಣಪ್ಪ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.