ADVERTISEMENT

ಭಾಲ್ಕಿ: ಜಿಲ್ಲೆಯಲ್ಲಿ 15 ಲಕ್ಷ ಗಿಡ ನೆಡುವ ಗುರಿ

ವನಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಖಂಡ್ರೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2023, 6:59 IST
Last Updated 25 ಜುಲೈ 2023, 6:59 IST
ಭಾಲ್ಕಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು
ಭಾಲ್ಕಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು    

ಭಾಲ್ಕಿ: ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 15 ಲಕ್ಷ ಗಿಡಗಳನ್ನು ನೆಡುವ ಗುರಿ ಅರಣ್ಯ ಇಲಾಖೆಗೆ ನೀಡಲಾಗಿತ್ತು. ಕಳೆದ ಕೆಲ ದಿನಗಳಲ್ಲೇ ಸುಮಾರು 8 ಲಕ್ಷ ಗಿಡಗಳನ್ನು ನೆಟ್ಟಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ವನಮಹೋತ್ಸವ-2023 ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

’ಬೀದರ್ ಜಿಲ್ಲೆಯಲ್ಲಿ ಹಸಿರು ಪ್ರದೇಶ ಹೆಚ್ಚಿಸಲು ಕ್ರಮ ವಹಿಸಲಾಗಿದೆ. ನಮ್ಮ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು, ಎಲ್ಲ ವಿದ್ಯಾರ್ಥಿಗಳು ತಪ್ಪದೇ ಮನೆಗೊಂದು ಸಸಿ ನೆಟ್ಟು ಪೋಷಣೆ ಮಾಡಬೇಕು. ’ಜಿಲ್ಲೆ ಸಂಪತ್ಭರಿತ ಭೂಮಿ ಹೊಂದಿದೆ. ಫಲವತ್ತಾದ ಮಣ್ಣು ಇದೆ. ಎಲ್ಲ ಬೆಳೆಗಳು ಬೆಳೆಯಲು ಅವಕಾಶ ಇದೆ. ಆದರೆ, ಸರಿಯಾಗಿ ಬಳಕೆ ಮಾಡಿಕೊಳ್ಳುವಲ್ಲಿ ಎಡುತ್ತಿದ್ದೇವೆ. ಪರಿಣಾಮ ಜಿಲ್ಲೆಯಲ್ಲಿ ಕೇವಲ ಶೇ.7 ರಿಂದ 8ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ADVERTISEMENT

’ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಕಡಿಮೆ ಇದ್ದರೂ ಕೂಡ ಅರಣ್ಯೇತರ ಭೂಮಿ ಬಳಸಿಕೊಂಡು ಹಸಿರೀಕರಣ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಪಟ್ಟಣದಲ್ಲಿ ಒಂದೇ ದಿನ 5800 ಗಿಡಗಳನ್ನು ನೆಡುವ ಮೂಲಕ ಈ ವರ್ಷದಲ್ಲಿ ತಾಲ್ಲೂಕಿನಲ್ಲಿ 5 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ‘ ಎಂದರು.

’ಮನುಷ್ಯ ಐಷಾರಾಮಿ ಜೀವನ ಅನುಭವಿಸಲು ಪರಿಸರ ನಾಶ ಮಾಡುತ್ತಿದ್ದಾನೆ. ಹವಮಾನದಲ್ಲಿ ವೈಪರೀತ್ಯ ಉಂಟಾಗುತ್ತಿದೆ. ನೀರು, ಆಹಾರ, ಗಾಳಿಯಲ್ಲಿ ಮಾಲಿನ್ಯ ಉಂಟಾಗಿ ಮನುಷ್ಯ ರೋಗಗ್ರಸ್ತನಾಗುತ್ತಿದ್ದಾನೆ. ಹಾಗಾಗಿ ಪ್ರತಿಯೊಬ್ಬರು ಪರಿಸರ, ಪ್ರಕೃತಿ ಸಂರಕ್ಷಣೆ ಮುಂದಾಗಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡುಗೆಯಾಗಿ ನೀಡಬೇಕು‘ ಎಂದು ತಿಳಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಚಿಂತನೆ: ಸಾರ್ವಜನಿಕರು ಏಕ ಬಳಕೆ ಪ್ಲಾಸ್ಟಿಕ್ ಉಪಯೋಗ ಮಾಡುವುದನ್ನು ಕಡಿಮೆ ಮಾಡಬೇಕು. ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಚಿಂತನೆ ಮಾಡಲಾಗುತ್ತಿದೆ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಇದಕ್ಕೂ ಮುನ್ನ ಸರ್ಕಾರಿ ಪ್ರೌಢಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಪ್ರಾಸ್ತಾವಿಕ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ ರಂಜನ್, ಕಲಬುರಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನಿಲ್ ಪನ್ವಾರ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಬಿಕೆಐಟಿ ಪ್ರಾಚಾರ್ಯ ಡಾ.ನಾಗಶೆಟ್ಟೆಪ್ಪ ಬಿರಾದಾರ, ಡಿಡಿಪಿಯು ಚಂದ್ರಕಾಂತ ಶಹಾಬಾದಕರ್ ಸೇರಿದಂತೆ ಇತರರು ಇದ್ದರು. ಬೀದರ್ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ.ಸ್ವಾಗತಿಸಿದರು. ಪ್ರಾಚಾರ್ಯ ಅಶೋಕ ರಾಜೋಳೆ ನಿರೂಪಿಸಿದರು. ಎ.ಜಿ.ಪಾಟೀಲ ವಂದಿಸಿದರು.

ಭಾಲ್ಕಿಯ ಬಿಕೆಐಟಿ ಆವರಣದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.