ADVERTISEMENT

ಮಳವಳ್ಳಿ: ಕೇಂದ್ರದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 14:03 IST
Last Updated 8 ಫೆಬ್ರುವರಿ 2024, 14:03 IST
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಸಿಪಿಐ(ಎಂ) ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಸಿಪಿಐ(ಎಂ) ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.   

ಮಳವಳ್ಳಿ: ಅನುದಾನ ಹಂಚಿಕೆ ತಾರತಮ್ಯ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಹಾಗೂ ಕೇರಳ ಸರ್ಕಾರಗಳು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಜಮಾಯಿಸಿದ ಸಿಪಿಐ(ಎಂ) ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯೆ ದೇವಿ ಮಾತನಾಡಿ,‘ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಸಾಕಷ್ಟು ತಾರತಮ್ಯ ಮಾಡುತ್ತಿದ್ದು, ದಕ್ಷಿಣ ಭಾರತ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ಕೆಲ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಈ ಕೂಡಲೆ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು. ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ಆದಾಯ ತೆರಿಗೆ ವಿಭಾಗಗಳನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗ ತಡೆಯಬೇಕು. ರಾಜ್ಯದ ವಿಶ್ವ ವಿದ್ಯಾಲಯಗಳ ವಿಷಯ ಕುಲಪತಿಗಳಾಗಿ ರಾಜ್ಯಪಾಲರ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು’ ಎಂದರು.

‘ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು ಮತ್ತು ವಿಳಂಬ ಮಾಡದೆ ಸಹಿ ಮಾಡುವಂತೆ ಕ್ರಮವಹಿಸಬೇಕು. ಬರಗಾಲದ ಪರಿಹಾರದ ಭಾಗವಾಗಿ ಕೃಷಿಕೂಲಿಕಾರರಿಗೆ, ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಪ್ರಾಣಿ, ಪಕ್ಷಿ, ಜಾನುವಾರುಗಳ ರಕ್ಷಣೆ ವ್ಯವಸ್ಥಿತವಾಗಿ ಮಾಡಬೇಕು’ ಎಂದು ಆಗ್ರಹಿಸಿದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀತಿ ಖಂಡಿಸಿ ತಮಿಳುನಾಡು, ಆಂದ್ರಪ್ರದೇಶ, ಪಂಜಾಬ್, ದೆಹಲಿ, ಕರ್ನಾಟಕ ಹಾಗೂ ತೆಲಂಗಾಣ ರಾಜ್ಯ ಸರ್ಕಾರಗಳ ಹೋರಾಟವನ್ನು ಬೆಂಬಲಿಸಲಾಗುವುದು’ ಎಂದರು.

ಗ್ರೇಡ್-2 ತಹಶೀಲ್ದಾರ್ ಬಿ.ವಿ.ಕುಮಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಂಡಳಿ ಸದಸ್ಯ ಎನ್.ಎಲ್.ಭರತ್ ರಾಜ್, ಜಿಲ್ಲಾ ಸಮಿತಿ ಸದಸ್ಯ ಎನ್.ಲಿಂಗರಾಜಮೂರ್ತಿ, ತಾಲ್ಲೂಕು ಕಾರ್ಯದರ್ಶಿ ಸುಶೀಲಾ, ಮುಖಂಡರಾದ ಆನಂದ, ಗುರುಸ್ವಾಮಿ, ಮಹಾದೇವಮ್ಮ, ತಿಮ್ಮೇಗೌಡ, ಶಿವಕುಮಾರ್, ಸುನಂದಮ್ಮ, ದೇವರಾಜ್, ಲಿಂಗರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.