ADVERTISEMENT

ಬಿಜೆಪಿ, ಕಾಂಗ್ರೆಸ್‌ ಸೋಲಿಸಿ: ಕೃಷ್ಣಮೂರ್ತಿ

ಚಾಮರಾಜನಗರದಲ್ಲಿ ಬಿಎಸ್‌ಪಿ ಕಾರ್ಯಕರ್ತರ ಸಭೆ, ಅಭ್ಯರ್ಥಿ ಮಹಾದೇವಯ್ಯ ಭಾಗಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 4:24 IST
Last Updated 28 ಮಾರ್ಚ್ 2024, 4:24 IST
ಬಿಎಸ್‌‍ಪಿ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರಾ.ಮಹೇಶ್ ಮಾತನಾಡಿದರು. ಸಂಯೋಜಕ ಕೃಷ್ಣಮೂರ್ತಿ, ಜಿಲ್ಲಾ ಅಧ್ಯಕ್ಷ ನಾಗಯ್ಯ, ಅಭ್ಯರ್ಥಿ ಸಿ.ಮಹಾದೇವಯ್ಯ ಇತರರು ಭಾಗವಹಿಸಿದ್ದರು 
ಬಿಎಸ್‌‍ಪಿ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರಾ.ಮಹೇಶ್ ಮಾತನಾಡಿದರು. ಸಂಯೋಜಕ ಕೃಷ್ಣಮೂರ್ತಿ, ಜಿಲ್ಲಾ ಅಧ್ಯಕ್ಷ ನಾಗಯ್ಯ, ಅಭ್ಯರ್ಥಿ ಸಿ.ಮಹಾದೇವಯ್ಯ ಇತರರು ಭಾಗವಹಿಸಿದ್ದರು    

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ಇದು ವಿವಿಧ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಬಿಎಸ್ಪಿ ತಲೆನೋವಾಗಿದೆ’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಬುಧವಾರ ತಿಳಿಸಿದರು. 

ನಗರದ ಹೌಸಿಂಗ್ ಬೋರ್ಡ್‌ ಕಾಲೊನಿಯಲ್ಲಿರುವ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. 

‘ಸಂವಿಧಾನ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವ ಪಕ್ಷಗಳನ್ನು ಈ ಬಾರಿ ಸೋಲಿಸಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇರುವ ಬಿಎಸ್‌ಪಿಯನ್ನು ಎಲ್ಲರೂ ಬೆಂಬಲಿಸಬೇಕಿದೆ’ ಎಂದರು.

ADVERTISEMENT

‘ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆನೆ ಗುರುತನ್ನು ಅಭ್ಯರ್ಥಿ ಎಂದು ಭಾವಿಸಿ, ಕಾರ್ಯಕರ್ತರು ಮತ ನೀಡಬೇಕು. ಈ ಮೂಲಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಪ್ರಯತ್ನ ಮಾಡಬೇಕು’ ಎಂದರು. 

ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರಾ.ಮಹೇಶ್ ಮಾತನಾಡಿ, ‘ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಸಂವಿಧಾನವನ್ನು ನಾಶಮಾಡಲು ಮುಂದಾಗಿದೆ. ಅವರದ್ದೇ ಸಂಸದರಿಂದ ಅದನ್ನು ಹೇಳಿಸುವ ಪ್ರಯತ್ನ ಮಾಡಿದೆ. ಈ ವಿಚಾರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪರೋಕ್ಷವಾಗಿ ಸಹಕಾರ ನೀಡುತ್ತಾ ಬಂದಿದೆ. ಸಂವಿಧಾನ ಉಳಿವಿಗಾಗಿ ಬಹುಜನರು ಬಿಎಸ್‌ಪಿಯನ್ನು ಬೆಂಬಲಿಸಬೇಕು’ ಎಂದು ಹೇಳಿದರು.

ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ನಿವೃತ್ತ ತಹಶೀಲ್ದಾರ್ ಸಿ.ಮಹಾದೇವಯ್ಯ, ಪಕ್ಷದ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಮೈಸೂರು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.