ಕೊಳ್ಳೇಗಾಲ: ಪತ್ನಿಯನ್ನು ಕೊಂದು, ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಶವವನ್ನು ಎಸೆದಿದ್ದ ಪತಿಗೆ ಇಲ್ಲಿನ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಹನೂರು ತಾಲ್ಲೂಕಿನ ಹುತ್ತೂರು ಗ್ರಾಮದ ನಾಗ (46) ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ.
2019ರ ಮಾರ್ಚ್ 12ರಂದು ಈ ಪ್ರಕರಣ ನಡೆದಿತ್ತು. ಅಂದು 1,000 ನೀಡುವಂತೆ ಪತ್ನಿ ಅರಸಮ್ಮ ಜೊತೆ ಜಗಳ ತೆಗೆದಿದ್ದ. ಇಬ್ಬರ ನಡುವೆ ವಾಗ್ವಾದ ನಡೆದು, ನಾಗನು ಆಕೆಯ ಮೇಲೆ ಹಮ್ಮೆ ಮಾಡಿ, ಕುತ್ತಿಗೆ ಹಿಸುಕಿ, ಕಾಲಿನಿಂದ ಹೊಟ್ಟೆಗೆ ಒದ್ದು ಕೊಲೆ ಮಾಡಿದ್ದ. ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಶವವನ್ನು ಹೆಗಲ ಮೇಲೆ ಹೊತ್ತುಕೊಂಡು ಓಣಿಯಲ್ಲಿ ಬಿಸಾಡಿದ್ದ.
ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿ ನಾಗನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.
ಆರೋಪಗಳು ಸಾಬೀತಾಗಿರುವುದರಿಂದ ನಗರದ ಹೆಚ್ಚುವರಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎನ್.ಆರ್.ಲೋಕಪ್ಪ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ, ₹75 ಸಾವಿರ ದಂಡ ವಿಧಿಸಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಪಿ.ಮಂಜುನಾಥ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.