ADVERTISEMENT

ನೀತಿ ಸಂಹಿತೆಗೆ ಧಕ್ಕೆಯಾದಂತೆ ಬಾಬೂಜಿ, ಅಂಬೇಡ್ಕರ್‌ ಜಯಂತಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 3:12 IST
Last Updated 3 ಏಪ್ರಿಲ್ 2024, 3:12 IST
ಡಾ.ಬಾಬು ಜಗಜೀವನ ರಾಂ ಮತ್ತು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ಆಚರಣೆ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ನೇತೃತ್ವದಲ್ಲಿ ಅಧಿಕಾರಿಗಳು ಸಂಘಟನೆಗಳ ಮುಖಂಡರ ಸಭೆ ನಡೆಯಿತು
ಡಾ.ಬಾಬು ಜಗಜೀವನ ರಾಂ ಮತ್ತು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ಆಚರಣೆ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ನೇತೃತ್ವದಲ್ಲಿ ಅಧಿಕಾರಿಗಳು ಸಂಘಟನೆಗಳ ಮುಖಂಡರ ಸಭೆ ನಡೆಯಿತು   

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಂ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಆಚರಿಸಲು ನಿರ್ಧರಿಸಲಾಗಿದೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ಭಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಗೀತಾ ಹುಡೇದ ಮಾತನಾಡಿ,  ‘ಡಾ. ಬಾಬು ಜಗಜೀವನ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ, ರಾಜಕೀಯ ರಹಿತವಾಗಿ, ಸದಾಚಾರ ಸಂಹಿತೆಗಳನ್ನು ಪಾಲಿಸಿ ಆಚರಣೆ ಮಾಡಲಾಗುವುದು. ಬಾಬು ಜಗಜೀವನ ರಾಂ ಜಯಂತಿಯನ್ನು ಇದೇ 5ರಂದು ಆಯೋಜಿಸಲಾಗುವುದು.  ನಗರದ ಚಾಮರಾಜೇಶ್ವರ ದೇವಾಲಯದಿಂದ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಪನ್ಯಾಸವನ್ನೂ ಆಯೋಜಿಸಲಾಗುವುದು’ ಎಂದರು. 

ADVERTISEMENT

‘14ರಂದು ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿಂದ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪರಿಣಿತರಿಂದ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿವೆ. ಈ ಎರಡು ಕಾರ್ಯಕ್ರಮಗಳಿಗಾಗಿ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು’ ಎಂದು ತಿಳಿಸಿದರು.

ಡಿ.ವೈ.ಎಸ್.ಪಿ ಲಕ್ಷ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘಸಂಸ್ಥೆಗಳು, ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.